ದೇಶ

ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ: ಸತ್ಯಕ್ಕೆ ಇಂದಲ್ಲಾ ನಾಳೆ ಗೆಲುವು ಸಿಕ್ಕೇ ಸಿಗುತ್ತೆ- ರಾಹುಲ್ ಗಾಂಧಿ

Nagaraja AB

ನವದೆಹಲಿ:  'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ಸಂಭ್ರಮ ಮನೆ ಮಾಡಿದೆ.

ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆಯೇ ಎಐಸಿಸಿ ಪ್ರಧಾನ ಕಚೇರಿ ಬಳಿ ಜಮಾಯಿಸಿದ್ದ ಪಕ್ಷದ ಸಾವಿರಾರು ಕಾರ್ಯಕರ್ತರು ಸಿಹಿ ಹಂಚಿ, ಡೊಳ್ಳು ಬಾರಿಸುತ್ತಾ ಕುಣಿದು ಕುಪ್ಪಳಿಸಿದರು.

ಪ್ರಿಯಾಂಕಾ ಗಾಂಧಿ ಅವರೊಂದಿಗೆ ಎಐಸಿಸಿ ಕಚೇರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಹಂಚಿಕೊಂಡರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಒಂದಲ್ಲಾ ಒಂದು ದಿನ ಸತ್ಯಕ್ಕೆ ಗೆಲುವು ಸಿಕ್ಕೆ ಸಿಗುತ್ತೆ, ಇವತ್ತಲ್ಲದಿದ್ದರೆ ನಾಳೆ ಅಥವಾ ನಾಡಿದ್ದು ಜಯ ಸಿಗುತ್ತದೆ. ನನ್ನ ಹಾದಿ ಸ್ಪಷ್ಟವಾಗಿದೆ. ನನ್ನ ಕೆಲಸವೇನೂ, ಏನು ಮಾಡಬೇಕು ಎಂಬುದರ ಬಗ್ಗೆ ಮನಸ್ಸಿನಲ್ಲಿ ಸ್ಪಷ್ಟತೆ ಇದೆ. ಜನರು ಪ್ರೀತಿ ಮತ್ತು ಬೆಂಬಲ ಕೊಟ್ಟಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಇದಕ್ಕೂ ಮುನ್ನಾ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಮಗೆ ಸಂತಸ ತಂದಿದೆ. ಇದು ಪ್ರಜಾಪ್ರಭುತ್ವದ ಗೆಲುವು, ಸತ್ಯ ಮೇವ ಜಯತೇ ಎಂದು ಬಣ್ಣಿಸಿದರು. ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಮಾಡಿ ಬಡವರನ್ನು ಭೇಟಿಯಾಗಿದ್ದರು. ಅವರು ಕೋಲಾರದಲ್ಲಿ ಭಾಷಣ ಮಾಡಿದ್ದರು ಆದರೆ, ಗುಜರಾತ್ ನ್ಯಾಯಾಲಯದಿಂದ 2 ವರ್ಷಗಳ ಜೈಲು ಶಿಕ್ಷೆ ನೀಡಲಾಗಿತ್ತು. ತೀರ್ಪು ನೀಡಿದ 24 ಗಂಟೆಯಲ್ಲೇ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆದರೆ, ಈಗ ಸುಪ್ರೀಂಕೋರ್ಟ್ ಸತ್ಯದ ಪರ ತೀರ್ಪು ನೀಡಿದ್ದು, ಇದು ವಯನಾಡು ಕ್ಷೇತ್ರದ ಎಲ್ಲಾ ಮತದಾರರ ಗೆಲುವು ಎಂದರು. 

ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ಇದೀಗ ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದ ಬಚಾವ್ ಆಗಿದ್ದು, ಕೇರಳದ ವೈಯನಾಡು ಲೋಕಸಭೆ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದಾರೆ.

SCROLL FOR NEXT