ದೇಶ

ಮಹಿಳೆಯರ ಮೇಲಿನ ಅಪರಾಧ ತಡೆಗಟ್ಟುವುದು ರಾಜಸ್ಥಾನ ಸರ್ಕಾರದ ಆದ್ಯತೆ: ಸಿಎಂ ಅಶೋಕ್ ಗೆಹ್ಲೋಟ್

Ramyashree GN

ಜೈಪುರ: ಮಹಿಳೆಯರು ಮತ್ತು ಸಮಾಜದ ದುರ್ಬಲ ವರ್ಗಗಳ ವಿರುದ್ಧದ ಅಪರಾಧಗಳನ್ನು ತಡೆಗಟ್ಟುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಭಿಲ್ವಾರಾದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು 'ದುರಂತ' ಎಂದು ಬಣ್ಣಿಸಿದ ಅವರು, ಪೊಲೀಸರು ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡಿದ್ದು, ಆರೋಪಿಗಳಿಗೆ ಶೀಘ್ರವಾಗಿ ಕಠಿಣ ಶಿಕ್ಷೆ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಕೆಲವರು ಘಟನೆಗೆ ರಾಜಕೀಯ ಬಣ್ಣ ಬಳಿಯುತ್ತಿದ್ದು, ಇದು ಸೂಕ್ತವಲ್ಲ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

ಆಗಸ್ಟ್ 2ರಂದು ಭಿಲ್ವಾರಾ ಜಿಲ್ಲೆಯಲ್ಲಿ ದನ ಮೇಯಿಸಲು ಹೋದಾಗ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಂದು ನಂತರ ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಹಾಕಲಾಗಿತ್ತು. ಈ ಪ್ರಕರಣದಲ್ಲಿ ಈವರೆಗೆ ಮಹಿಳೆ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.

ಪದೇ ಪದೆ ನಿಯಮ ಉಲ್ಲಂಘಿಸುವವರ ವಿರುದ್ಧ ದಾಖಲೆಗಳನ್ನು ಇಟ್ಟುಕೊಳ್ಳಿ, ಅಂತವರ ವಿರುದ್ಧ ಸರ್ಕಾರಿ ಉದ್ಯೋಗಗಳನ್ನು ಕಸಿದುಕೊಳ್ಳುವುದು ಸೇರಿದಂತೆ ಇತರೆ ಕಠಿಣ ಕ್ರಮ ಕೈಗೊಳ್ಳಲು ಗೆಹ್ಲೋಟ್ ಪೊಲೀಸರಿಗೆ ಸೂಚಿಸಿದರು.

ಸೋಮವಾರ ರಾತ್ರಿ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಕಾನೂನು ಸುವ್ಯವಸ್ಥೆ ಪರಿಶೀಲನಾ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಅಧಿಕೃತ ಹೇಳಿಕೆಯ ಪ್ರಕಾರ, ವಿಶೇಷ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ನಿಗದಿತ ಸಮಯ ಮೀರಿ ತೆರೆದಿರುವ ಬಾರ್‌ಗಳು ಮತ್ತು ನೈಟ್‌ಕ್ಲಬ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ನಿರ್ದೇಶಿಸಿದರು.

ನಿರ್ವಾಹಕರು ಮತ್ತು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ ನಿಯಮಗಳನ್ನು ಉಲ್ಲಂಘಿಸಿದ ಅಂತಹ ಮಳಿಗೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದರು.

ಗೃಹ ಖಾತೆ ರಾಜ್ಯ ಸಚಿವ ರಾಜೇಂದ್ರ ಯಾದವ್, ಮುಖ್ಯ ಕಾರ್ಯದರ್ಶಿ ಉಷಾ ಶರ್ಮಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ಗೃಹ) ಆನಂದ್ ಕುಮಾರ್, ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

SCROLL FOR NEXT