ದೇಶ

ತೆಲಂಗಾಣ: ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ನೂತನ ನಾಯಕನ ಆಯ್ಕೆ ಸಾಧ್ಯತೆ

Ramyashree GN

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲು ಮುಂದಾಗಿರುವ ಕಾಂಗ್ರೆಸ್ ಕಾಂಗ್ರೆಸ್ ಶಾಸಕರು ಸೋಮವಾರ ಇಲ್ಲಿ ಸಭೆ ಸೇರಲಿದ್ದು, ತಮ್ಮ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಹಿರಿಯ ನಾಯಕರು ಹಾಗೂ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ಸಭೆ ನಡೆಯಲಿದೆ.

119 ಸ್ಥಾನಗಳ ವಿಧಾನಸಭೆಯಲ್ಲಿ 64 ಸ್ಥಾನಗಳನ್ನು ಗೆದ್ದ ನಂತರ, ಕಾಂಗ್ರೆಸ್ ನಾಯಕರ ನಿಯೋಗವು ಭಾನುವಾರ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿತು.

ರಾಜ್ಯಪಾಲರೊಂದಿಗಿನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಂಗಳವಾರ ಬೆಳಿಗ್ಗೆ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ ಸಭೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದ ಪಿಸಿಸಿ ಅಧ್ಯಕ್ಷ ಅನುಮುಲ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.

ರೆಡ್ಡಿ ಅವರು ಕೊಡಂಗಲ್ ಕ್ಷೇತ್ರದಿಂದ 32,000 ಮತಗಳ ಅಂತರದಿಂದ ಬಿಆರ್‌ಎಸ್ ಪ್ರತಿಸ್ಪರ್ಧಿ ಪಟ್ನಂ ನರೇಂದ್ರ ರೆಡ್ಡಿ ಅವರನ್ನು ಸೋಲಿಸಿದರು. ಆದರೆ, ಕಾಮರೆಡ್ಡಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಎದುರಿಗೆ ಸೋತರು.

ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಸುಮಾರು 10 ವರ್ಷಗಳ ಆಡಳಿತವು ಭಾನುವಾರ ಅಂತ್ಯಗೊಂಡಿತು. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅದನ್ನು ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಅಂಗೀಕರಿಸಿದ್ದಾರೆ.

ರಾವ್ ಅವರನ್ನು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಕೇಳಲಾಗಿದೆ.

ಆಂಧ್ರಪ್ರದೇಶದಿಂದ ತೆಲಂಗಾಣವನ್ನು ಬೇರ್ಪಡಿಸಿದ ನಂತರ 2014 ರಿಂದಲೂ ಬಿಆರ್‌ಎಸ್ ರಾಜ್ಯವನ್ನು ಆಳುತ್ತಿದೆ.

SCROLL FOR NEXT