ನವದೆಹಲಿ: ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಗುರುವಾರ ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿದೆ.
ಇಂದು ಸಂಸತ್ತಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಅವರನ್ನು ರೇವಂತ್ ರೆಡ್ಡಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ಹೈದರಾಬಾದ್ಗೆ ತೆರಳುತ್ತೀರಾ ಎಂಬ ವರದಿಗಾರರ ಪ್ರಶ್ನೆಗೆ "ಹೌದು, ಹೋದಬಹುದು" ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಬಲಿಷ್ಠ ಬಿಆರ್ ಎಸ್, ಮಹತ್ವಾಕಾಂಕ್ಷಿ ಬಿಜೆಪಿ ಎದುರು ಅದಮ್ಯ ಹೋರಾಟ: ತೆಲಂಗಾಣದ ಕಾಂಗ್ರೆಸ್ ಹೀರೋ ರೇವಂತ್ ರೆಡ್ಡಿ!
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದ್ದ ರೇವಂತ್ ರೆಡ್ಡಿ, ಖರ್ಗೆ ಅವರಿಗೆ ಹೂಗುಚ್ಛ ನೀಡಿ ಶಾಲು ಹೊದಿಸಿ ಅಭಿನಂದಿಸಿದರು.
ರೇವಂತ್ ರೆಡ್ಡಿ ಅವರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮತ್ತು ಪ್ರಿಯಾಂಕಾ ಗಾಂಧಿ ಅವರಿಗೂ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.