ದೇಶ

ಅದಾನಿ ವಿಚಾರವಾಗಿ ಗದ್ದಲ; ಲೋಕಸಭೆ, ರಾಜ್ಯಸಭೆ ಮಧ್ಯಾಹ್ನಕ್ಕೆ ಮುಂದೂಡಿಕೆ

Ramyashree GN

ನವದೆಹಲಿ: ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯನ್ನು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಕಲಾಪ ಆರಂಭವಾದ ಕೂಡಲೇ, ಕಾಂಗ್ರೆಸ್ ಮತ್ತು ಡಿಎಂಕೆ ಸದಸ್ಯರು ಸದನದ ಬಾವಿಗೆ ಧಾವಿಸಿ, ಘೋಷಣೆಗಳನ್ನು ಕೂಗಿದರು ಮತ್ತು ದೇಶದ ಅತಿದೊಡ್ಡ ಸಂಘಟಿತ ಸಂಸ್ಥೆಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಕೋರಿದರು.

ಪ್ರಶ್ನೋತ್ತರ ಕಲಾಪ ಆರಂಭಿಸಿದ ಸ್ಪೀಕರ್ ಓಂ ಬಿರ್ಲಾ, ಜಿ20, ಆರೋಗ್ಯ ಮತ್ತು ರಕ್ಷಣೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಲು ಪಟ್ಟಿಮಾಡಲಾಗಿದೆ ಎಂದು ಸದನದ ಕಲಾಪ ನಡೆಸಲು ಅವಕಾಶ ನೀಡುವಂತೆ ವಿಪಕ್ಷಗಳ ಸದಸ್ಯರನ್ನು ಒತ್ತಾಯಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ ಚೊಚ್ಚಲ ಭಾಷಣಕ್ಕೆ ಧನ್ಯವಾದ ನಿರ್ಣಯವನ್ನು ಸದನವು ಚರ್ಚಿಸಬೇಕಾಗಿದೆ ಎಂದು ಅವರು ಹೇಳಿದರು. ಆದರೆ, ಘೋಷಣೆ ಕೂಗುತ್ತಾ, ಪ್ರತಿಭಟನೆ ಮುಂದುವರಿದಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇದೇ ವಿಚಾರವಾಗಿ ರಾಜ್ಯಸಭೆಯನ್ನೂ ಮಧ್ಯಾಹ್ನ 2.30ಕ್ಕೆ ಮುಂದೂಡಲಾಯಿತು. 

ಇದಕ್ಕೂ ಮುನ್ನ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ 16 ಸಮಾನ ಮನಸ್ಕ ಪಕ್ಷಗಳ ನಾಯಕರು ಸಭೆ ಸೇರಿ ಉಭಯ ಸದನಗಳಲ್ಲಿ ಇಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದ್ದರು.

SCROLL FOR NEXT