ಜಾರ್ಖಂಡ್: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲದಂತಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ. ಸಾಹೇಬ್ಗಂಜ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಮಾತನಾಡಲು ಧೈರ್ಯ ತೋರುವವರನ್ನು ಕಂಬಿ ಹಿಂದೆ ಹಾಕಲಾಗಿದೆ ಎಂದು ಅವರು ಆರೋಪಿಸಿದರು.
2014ರಲ್ಲಿ ಹಣದುಬ್ಬರ ತಡೆಯುವ ಭರವಸೆಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತು, ಆದರೆ ಅಧಿಕಾರಕ್ಕೆ ಬಂದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಮತ್ತು ಬಡತನ ಹೆಚ್ಚುತ್ತಿದೆ ಎಂದು ಹೇಳಿದ ಖರ್ಗೆ, ದೇಶ ದೇಶದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದ್ದು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್ ಎಂದರು.
ಇದನ್ನೂ ಓದಿ: ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯ ಪ್ರಸ್ತಾಪಿಸುತ್ತಲೇ ಇರುತ್ತೇವೆ, ಇದೊಂದು ದೊಡ್ಡ ಹಗರಣ: ಖರ್ಗೆ
ರಾಜ್ಯದಲ್ಲಿ ಪಕ್ಷದ 60 ದಿನಗಳ 'ಹಾಥ್ ಸೆ ಹಾಥ್ ಜೋಡೋ' ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. ಈ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕೇಂದ್ರದ ಜನ ವಿರೋಧಿ ನೀತಿಗಳ ಬಗ್ಗೆ ಜನರಿಗೆ ಅರಿವು ಮೂಡಿಸುವರು.