ದೇಶ

ಕಾಂಗ್ರೆಸ್ ನಾಯಕರು ಕಾನೂನಿಗಿಂತ ದೊಡ್ಡವರಲ್ಲ: ಬಿಜೆಪಿ

Lingaraj Badiger

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಬಂಧನ ಖಂಡಿಸಿದ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಪ್ರತಿಪಕ್ಷ ನಾಯಕರು ಕಾನೂನಿಗಿಂತ ದೊಡ್ಡವರಲ್ಲ ಎಂದು ತಿರುಗೇಟು ನೀಡಿದೆ. 

 "ಏನೇ ಮಾಡಿದರೂ ಕಾನೂನುಬದ್ಧವಾಗಿ ಮಾಡಲಾಗುತ್ತದೆ. ವಿರೋಧ ಪಕ್ಷದ ನಾಯಕರು ತಾವು ಕಾನೂನಿಗಿಂತ ದೊಡ್ಡವರು ಎಂಬ "ತಪ್ಪು ಕಲ್ಪನೆ" ಯಲ್ಲಿ ಬದುಕಬಾರದು" ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಕಾಂಗ್ರೆಸ್ ಈಗ “ವಿಕ್ಟಿಮ್ ಕಾರ್ಡ್” ಬಳಸುತ್ತಿದೆ ಎಂದು ಭಾಟಿಯಾ ವಾಗ್ದಾಳಿ ನಡೆಸಿದ್ದಾರೆ.

ಖೇರಾ ಬಂಧನ ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುವ ಮೂಲಕ "ಕಾನೂನನ್ನು ಉಲ್ಲಂಘಿಸಿದ್ದಾರೆ" ಮತ್ತು ಸಹ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಾರೆ.  ಕಾಂಗ್ರೆಸ್ ಪ್ರತಿಭಟನೆಯಿಂದ ಜನರಿಗೆ ತೊಂದರೆಯಾಗಿದೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ದೆಹಲಿ-ರಾಯಪುರ ವಿಮಾನದಿಂದ ಕೆಳಗಿಳಿದ ಬಳಿಕ ಗುರುವಾರ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

SCROLL FOR NEXT