ನವದೆಹಲಿ: ಹಿಂದೂಗಳ ಪ್ರಸಿದ್ಧ ಯಾತ್ರಾ ಸ್ಥಳ ಉತ್ತರಾಖಂಡದ ಜೋಶಿಮಠವು ಕುಸಿಯುತ್ತಿದ್ದು, ಬಿಕ್ಕಟ್ಟಿನ ಕುರಿತು ಪ್ರಧಾನಿ ಕಾರ್ಯಾಲಯವು ಭಾನುವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆಯನ್ನು ನಡೆಸಲಿದೆ.
ಉತ್ತರಾಖಂಡ ಪ್ರದೇಶದಲ್ಲಿ ಭೂಕುಸಿತ ಉಂಟಾಗಿರುವುದರಿಂದ ಮತ್ತು ಹಲವಾರು ಸ್ಥಳಗಳಲ್ಲಿ ಮನೆಗಳು ಬಿರುಕು ಬಿಟ್ಟಿರುವುದರಿಂದ ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.
ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರು ಸಂಪುಟ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಉತ್ತರಾಖಂಡದ ಹಿರಿಯ ಅಧಿಕಾರಿಗಳಲ್ಲದೆ ಜೋಶಿಮಠದ ಜಿಲ್ಲಾ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುಮಾರು 600 ಸಂತ್ರಸ್ತ ಕುಟುಂಬಗಳನ್ನು ತಕ್ಷಣ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ ಒಂದು ದಿನದ ನಂತರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಶನಿವಾರ ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು.
ಇದನ್ನೂ ಓದಿ: ಉತ್ತರಾಖಂಡ: ಜೋಶಿಮಠದಲ್ಲಿ ದೇವಾಲಯ ಕುಸಿತ ಬಳಿಕ ಕರ್ಣಪ್ರಯಾಗ್ ಸರದಿ; 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು
ಜೋಶಿಮಠವು ಸಾಂಸ್ಕೃತಿಕ, ಧಾರ್ಮಿಕ ಮತ್ತು ಪ್ರವಾಸೋದ್ಯಮದ ದೃಷ್ಟಿಯಿಂದ ಪ್ರಮುಖ ಸ್ಥಳವಾಗಿದ್ದು, ಅದನ್ನು ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಧಾಮಿ ಹೇಳಿದರು.
ಬದರಿನಾಥ್ ಮತ್ತು ಹೇಮಕುಂಡ ಸಾಹಿಬ್ ಮತ್ತು ಅಂತರರಾಷ್ಟ್ರೀಯ ಸ್ಕೀಯಿಂಗ್ ತಾಣವಾದ ಔಲಿಯಂತಹ ಪ್ರಸಿದ್ಧ ಯಾತ್ರಾ ಸ್ಥಳಗಳ ಹೆಬ್ಬಾಗಿಲಾಗಿರುವ ಜೋಶಿಮಠ ಕುಸಿತದಿಂದಾಗಿ ಪ್ರಮುಖ ಸವಾಲನ್ನು ಎದುರಿಸುತ್ತಿದೆ.