ನವದೆಹಲಿ: ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಬಹುಶಃ 5 ವರ್ಷಗಳು ಬೇಕಾಗಬಹುದು ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದೆ.
ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಪ್ರಮುಖ ಆರೋಪಿಯಾಗಿರುವ ಲಖೀಂಪುರ ಖೇರಿ ಹಿಂಸಾಚಾರದ ವಿಚಾರಣೆ ಪೂರ್ಣಗೊಳ್ಳಲು ಸುಮಾರು ಐದು ವರ್ಷಗಳು ಬೇಕಾಗಬಹುದು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಬುಧವಾರ ಸುಪ್ರೀಂ ಕೋರ್ಟ್ಗೆ ಉತ್ತರ ಪ್ರದೇಶ ಸರಕಾರ ಸಲ್ಲಿಸಿದ ಸ್ಥಿತಿಗತಿ ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರತಿಭಟನೆ, ರೈತರ ಮಾರಣ ಹೋಮದಿಂದ ಸುದ್ದಿಯಾಗಿದ್ದ ಲಖೀಂಪುರ್ ಖೇರಿಯಲ್ಲಿ ಕಮಲ ಕಮಾಲ್; ಎಲ್ಲ ಕ್ಷೇತ್ರಗಳೂ ಕ್ಲೀನ್ ಸ್ವೀಪ್!!
ಈ ಪ್ರಕರಣದಲ್ಲಿ 208 ಪ್ರಾಸಿಕ್ಯೂಷನ್ ಸಾಕ್ಷಿಗಳು, 171 ದಾಖಲೆಗಳು ಮತ್ತು 27 ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ವರದಿಗಳಿವೆ. ಹೀಗಾಗಿ ಈ ಪ್ರಕರಣದ ತನಿಖೆ ಪೂರ್ಣಗೊಳ್ಳಲು ಐದು ವರ್ಷಗಳಾಗಬಹುದು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸೂರ್ಯ ಕಾಂತ್ ಮತ್ತು ವಿ ರಾಮಸುಬ್ರಮಣಿಯನ್ ಅವರ ಪೀಠ ಸುಪ್ರೀಂ ಕೋರ್ಟ್ಗೆ ಕಳುಹಿಸಿರುವ ಪತ್ರದಲ್ಲಿ ತಿಳಿಸಿದೆ.
ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಅಥವಾ ಆದ್ಯತೆಯ ವಿಷಯಗಳ ವೇಳಾಪಟ್ಟಿಯೊಂದಿಗೆ ರಾಜಿ ಮಾಡಿಕೊಳ್ಳದೆ, ಸಾಮಾನ್ಯ ಕೋರ್ಸ್ನಲ್ಲಿ ವಿಚಾರಣೆಯನ್ನು ಮುಕ್ತಾಯಗೊಳಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಕಳೆದ ತಿಂಗಳು ಸುಪ್ರೀಂ ಕೋರ್ಟ್ ಸೆಷನ್ಸ್ ನ್ಯಾಯಾಲಯವನ್ನು ಕೇಳಿತ್ತು. ಇದಕ್ಕೆ ಉತ್ತರವಾಗಿ ಸೂರ್ಯ ಕಾಂತ್ ಮತ್ತು ವಿ ರಾಮಸುಬ್ರಮಣಿಯನ್ ಅವರ ಪೀಠ ಈ ಪತ್ರ ರವಾನೆ ಮಾಡಿದೆ.
ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಪಂಜಾಬ್-ಹರಿಯಾಣದಲ್ಲಿ ಹಳಿ ಮೇಲೆ ಕುಳಿತು ರೈತರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
2021ರ ಅಕ್ಟೋಬರ್ 3ರಂದು ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ ಹಾಗೂ ಉತ್ತರಪ್ರದೇಶದ ಉಪ ಮುಖ್ಯಮಂತ್ರಿಯಾಗಿದ್ದ ಕೇಶವ ಪ್ರಸಾದ್ ಮೌರ್ಯ ತಮ್ಮ ಪ್ರದೇಶಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ರೈತರು ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಪ್ರತಿಭಟನಾಕಾರರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು. ಬಳಿಕ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸಹಿತ 8 ಮಂದಿ ಮೃತಪಟ್ಟಿದ್ದರು. ಆಶೀಶ್ ಮಿಶ್ರಾ ಕುಳಿತ್ತಿದ್ದ ಕಾರಿನಡಿ ಬಿದ್ದು ನಾಲ್ವರು ರೈತರು ಮೃತಪಟ್ಟಿದ್ದರು. ಉದ್ರಿಕ್ತ ರೈತರು ಕಾರಿನ ಚಾಲಕ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದು ಸಾಯಿಸಿದ್ದರು. ಹಿಂಸಾಚಾರದಲ್ಲಿ ಪತ್ರಕರ್ತನೊಬ್ಬ ಕೂಡ ಪ್ರಾಣ ಕಳೆದುಕೊಂಡಿದ್ದರು.