ದೇಶ

ಕಾಂಗ್ರೆಸ್ ನನ್ನ ಸಮಸ್ಯೆ ಗಮನಿಸಿದೆ, ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ: ಸಚಿನ್ ಪೈಲಟ್

Lingaraj Badiger

ನವದೆಹಲಿ: ಕಾಂಗ್ರೆಸ್ ನನ್ನ ಸಮಸ್ಯೆಗಳನ್ನು ಗಮನಿಸಿದೆ ಎಂದು ಗುರುವಾರ ಸಂತಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು, ಒಗ್ಗಟ್ಟಿನಿಂದ ವಿಧಾನಸಭೆ ಚುನಾವಣೆ ಎದುರಿಸುವ ಮೂಲಕ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಪಕ್ಷದ ಕ್ರಮಗಳು ಮತ್ತು ತಾವು ಪ್ರಸ್ತಾಪಿಸಿದ ವಿಷಯಗಳ ಬಗ್ಗೆ ಹೈಕಮಾಂಡ್ ನೀಡಿದ ಭರವಸೆಗಳಿಂದ ತೃಪ್ತರಾಗಿರುವ ಪೈಲಟ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಎಐಸಿಸಿಯ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರ "ಗಂಭೀರವಾಗಿದೆ" ಮತ್ತು ಹಿಂದಿನ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ಪೈಲಟ್ ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಖರ್ಗೆ ನೇತೃತ್ವದಲ್ಲಿ ಚಿಂತನ-ಮಂಥನ ಸಭೆ ನಡೆಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೈಲಟ್, ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಮತ್ತು ಮತ್ತೆ ಅಧಿಕಾರಕ್ಕೆ ಬರುವ ಕುರಿತು "ಅರ್ಥಪೂರ್ಣ ಮತ್ತು ಸಮಗ್ರ" ಚರ್ಚೆ ನಡೆಸಲಾಗಿದೆ ಎಂದರು.

"ಎಲ್ಲ ವಿಷಯಗಳನ್ನು ಮುಕ್ತ ಮನಸ್ಸಿನಿಂದ ಚರ್ಚಿಸಲಾಗಿದೆ ಮತ್ತು ಮುಂದಿನ ಕೆಲವು ತಿಂಗಳುಗಳಲ್ಲಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಿ, ಮತ್ತೆ ಅಧಿಕಾರಕ್ಕೆ ಬರುವ ಬಗ್ಗೆ ಎಲ್ಲರೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ" ಎಂದರು.

SCROLL FOR NEXT