ಭೋಪಾಲ್: ಮಧ್ಯಪ್ರದೇಶದ ಭೀಕರ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಅತ್ಯಾಚಾರ ಗೈದು ಮೈತುಂಬಾ ಕಚ್ಚಿ ಗಾಯಗೊಳಿಸಲಾಗಿದೆ.
ಮಧ್ಯಪ್ರದೇಶದ ಕಾಡಿನಲ್ಲಿರುವ ಪ್ರಸಿದ್ಧ ಶಾರದಾ ದೇವಿ ದೇವಾಲಯದ ಸಮೀಪ 11 ವರ್ಷದ ಬಾಲಕಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ದೇಹ ರಕ್ತಸಿಕ್ತವಾಗಿದ್ದು ದೇಹದೆಲ್ಲೆಡೆ ಕಚ್ಚಿದ ಗುರುತುಗಳು ಕಾಣಿಸುತ್ತಿವೆ. ಬಾಲಕಿಯ ದೇಹಸ್ಥಿತಿ ಗಂಭೀರವಾಗಿದೆ. ಪ್ರಸ್ತುತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನು ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಈ ಪೈಕಿ ಒಬ್ಬ ದೇವಾಲಯ ಸಮಿತಿ ನಡೆಸುತ್ತಿದ್ದ ಗೋಶಾಲೆಯ ಕಾರ್ಮಿಕ ಎಂದು ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಬಾಲಕಿಗೆ ಸಾಧ್ಯವಿರುವ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಗುರುವಾರ ಸಂಜೆ ಬಾಲಕಿ ನಾಪತ್ತೆಯಾಗಿದ್ದು, ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಬಾಲಕಿಯ ಕುಟುಂಬದವರು ಹುಡುಕಲು ಆರಂಭಿಸಿದ್ದರು. ಶುಕ್ರವಾರ ಬೆಳಿಗ್ಗೆ ಸಾತ್ನಾ ಜಿಲ್ಲೆಯ ಮೈಹರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಕಂಡಿ ಟೌನ್ ಶಿಪ್ ಪಕ್ಕದ ಕಾಡಿನಲ್ಲಿ ಬಾಲಕಿ ಪತ್ತೆಯಾದಳು. ಈ ಕಾಡು, ದೇಶದ ಎಲ್ಲೆಡೆಗಳಿಂದ ಯಾತ್ರಾರ್ಥಿಗಳನ್ನು ಆಕರ್ಷಿಸುವ ಶಾರದಾಮಾತೆಯ ದೇವಾಲಯಕ್ಕೆ ಸಮೀಪದಲ್ಲಿದೆ.
ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣ ಪೊಲೀಸರು ಮೈಹರ್ ಸಿವಿಲ್ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿದರು. ಈ ಸುದ್ದಿ ಹರಡುತ್ತಿದ್ದಂತೆ ಉದ್ರಿಕ್ತ ಗ್ರಾಮಸ್ಥರು ಆಸ್ಪತ್ರೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.
ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ
ಇನ್ನು ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಕಮಲ್ ನಾಥ್, "ಮೈಹರ್ನಲ್ಲಿ ಪುಟ್ಟ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಘಟನೆಯು ಅತ್ಯಂತ ಖಂಡನೀಯವಾಗಿದೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮಾಡಿದಂತೆ ಹುಡುಗಿಯೊಂದಿಗೆ ಅಮಾನವೀಯವಾಗಿ ವರ್ತಿಸಲಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು, ನಿಯಮಿತವಾಗಿ ನಡೆಯುತ್ತಿವೆ. ರಾಜ್ಯದ ಹೆಣ್ಣುಮಕ್ಕಳೇ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಕಿಡಿಕಾರಿದ್ದಾರೆ.