ದೇಶ

ಸಿಸೋಡಿಯಾಗಿಲ್ಲ ಜಾಮೀನು, ಆದರೆ ಅನಾರೋಗ್ಯ ಪೀಡಿತ ಪತ್ನಿ ಭೇಟಿಗೆ ಹೈಕೋರ್ಟ್ ಅಸ್ತು

Lingaraj Badiger

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಆದರೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಒಂದು ದಿನದ ಮಟ್ಟಿಗೆ ಭೇಟಿಯಾಗಲು ಅವಕಾಶ ನೀಡಿದ್ದಾರೆ.

ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ನೋಡಿಕೊಳ್ಳಲು ಆರು ವಾರಗಳ ಕಾಲ ತಾತ್ಕಾಲಿಕ ಜಾಮೀನು ಕೋರಿ ಸಿಸೋಡಿಯಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಪ್ರಕರಣ ಸಂಬಂಧ ನಿಯಮಿತ ಜಾಮೀನು ಕೋರಿ ಸಿಸೋಡಿಯಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿ ಇದೆ. 

ಮಾರ್ಚ್ 9 ರಂದು ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ವಿರೋಧಿಸಿತ್ತು. ಸಿಸೋಡಿಯಾ ಅವರ ಪತ್ನಿ ಕಳೆದ 20 ವರ್ಷಗಳಿಂದ ಇಂತಹ ವೈದ್ಯಕೀಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಇಡಿ ವಕೀಲರು ಹೇಳಿದ್ದಾರೆ.

SCROLL FOR NEXT