ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಅಸ್ಸಾಂನ ಧೇಮಾಜಿ ಜಿಲ್ಲೆಯಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಮತ್ತಿಬ್ಬರು ಗಾಯಗೊಂಡಿದ್ದಾರೆ.
ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿನ ಜಮೀನು ವಿವಾದದಿಂದಾಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಇಬ್ಬರು ಅಸ್ಸಾಂ ಮೂಲದ ಬೋಗಾ ಚುಟಿಯಾ ಮತ್ತು ಮೊನಿತು ಗೊಗೊಯ್ ಎಂದು ಎಸ್ಪಿ ರಂಜನ್ ಭುಯಾನ್ ಹೇಳಿದ್ದಾರೆ.
ದುಷ್ಕರ್ಮಿಗಳು ಅರುಣಾಚಲ ಪ್ರದೇಶದವರಾಗಿದ್ದು ಈ ಭೂಮಿ ಅರುಣಾಚಲ ಪ್ರದೇಶಕ್ಕೆ ಸೇರಿದ್ದು ಎಂದು ಅವರು ಪ್ರತಿಪಾದಿಸಿದರು.
ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಎರಡು ರಾಜ್ಯಗಳ 800 ಕಿಮೀ ಗಡಿಯಲ್ಲಿ ವಿವಾದಗಳನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದ ವಾರಗಳ ನಂತರ ಈ ಘಟನೆ ನಡೆದಿದೆ.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಡೆಪ್ಯೂಟಿ ಕಮಿಷನರ್ ಮತ್ತು ಧೇಮಾಜಿಯ ಎಸ್ಪಿ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಸುದ್ದಿ ವಾಹಿನಿಗಳಿಗೆ ತಿಳಿಸಿದ್ದಾರೆ.