ದೇಶ

ತಮಿಳುನಾಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್, ಕಾರು ನಡುವೆ ಡಿಕ್ಕಿ, ಐವರು ದುರ್ಮರಣ

Nagaraja AB

ತಿರುಚ್ಚಿ: ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಮನಪಾರೈಯ ವಯಂಬಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್, ಕಾರು ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕಾರಿನ ಚಕ್ರ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಬಸ್ ಕೂಡಾ ಉರುಳಿ ಬಿದ್ದಿದೆ. ಈ ದುರ್ಘಟನೆಯಿಂದಾಗಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇತರ 34 ಮಂದಿ ಗಾಯಗೊಂಡಿದ್ದಾರೆ ಎಂದು  ತಿರುಚ್ಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್ ಕುಮಾರ್ ತಿಳಿಸಿದ್ದಾರೆ.

ಬಸ್ ಹಾಗೂ ಕಾರಿನ ಒಳಗಡೆ ಸಿಲುಕಿರುವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

SCROLL FOR NEXT