ದೇಶ

ಪ್ರತಿಭಟನಾ ಸ್ಥಳದಿಂದ ಹುತಾತ್ಮ ಯೋಧರ ಪತ್ನಿಯರ ತೆರವು: ರಾಜಸ್ಥಾನ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

Lingaraj Badiger

ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಮೂವರು ಸಿಆರ್‌ಪಿಎಫ್ ಯೋಧರ ವಿಧವೆ ಪತ್ನಿಯರನ್ನು ರಾಜಸ್ಥಾನ ಪೊಲೀಸರು ಜೈಪುರದ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸುವ ಮೂಲಕ ದೇಶದ ವೀರ ಮತ್ತು ಧೈರ್ಯಶಾಲಿಗಳ ಹಾಗೂ ಅವರ ಕುಟುಂಬವನ್ನು ಅವಮಾನಿಸಲಾಗಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ.

ಅನುಕಂಪದ ಮೇಲೆ ತಮ್ಮ ಮಕ್ಕಳಿಗೆ ಮಾತ್ರವಲ್ಲದೆ ಸಂಬಂಧಿಕರಿಗೂ ಸರ್ಕಾರಿ ಉದ್ಯೋಗ ನೀಡಲು ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಒತ್ತಾಯಿಸಿ ಈ ವಿಧವೆಯರು ಫೆಬ್ರವರಿ 28 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಆರು ದಿನಗಳಿಂದ ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಮನೆ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ಸಂಬಂಧ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ರಾಜ್ಯವರ್ಧನ್ ರಾಥೋಡ್ ಅವರು, ಇದು ತುಷ್ಟೀಕರಣದ ರಾಜಕೀಯ. ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಿ ದೇಶದ ವೀರರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದರು.

ಇಂದು ಬೆಳಗ್ಗೆ ವಿಧವೆಯರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ, ಅವರ ವಸತಿ ಪ್ರದೇಶಗಳ ಸಮೀಪವಿರುವ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT