ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರಾದಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಸಂಸದೀಯ ನಿಯೋಗದ ಮೇಲೆ ಹಲ್ಲೆ; ಮೂವರು ಆರೋಪಿಗಳ ಬಂಧನ

ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಸಂಸದೀಯ ನಿಯೋಗದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಗರ್ತಲಾ: ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಸಂಸದೀಯ ನಿಯೋಗದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಚುನಾವಣೋತ್ತರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಎಡ ಮತ್ತು ಕಾಂಗ್ರೆಸ್ ಸಂಸದರನ್ನು ಒಳಗೊಂಡ ನಿಯೋಗದ ಮೇಲೆ ಶುಕ್ರವಾರ ಬಿಶಾಲ್‌ಗಢ ಉಪವಿಭಾಗದ ಗಡಿ ಗ್ರಾಮವಾದ ನೇಹಲ್‌ಚಂದ್ರನಗರದಲ್ಲಿ ದಾಳಿ ನಡೆದಿದೆ.

'ಘಟನೆಗೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಸದ್ಯ ದೆಹಲಿಯಲ್ಲಿರುವ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಡಿಜಿಪಿ ಅಮಿತಾಭ್ ರಂಜನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಎಲ್ಲಾ ಆರೋಪಿಗಳನ್ನು ಅವರ ರಾಜಕೀಯ ಬಣಗಳನ್ನು ಲೆಕ್ಕಿಸದೆ ಬಂಧಿಸುವಂತೆ ಹೇಳಿದ್ದಾರೆ ಎಂದು ಮತ್ತೋರ್ವ ಅಧಿಕಾರಿ ತಿಳಿಸಿದ್ದಾರೆ.

ಎಡಪಕ್ಷಗಳು ಮತ್ತು ಕಾಂಗ್ರೆಸ್ ಜಂಟಿ ತಂಡವು ಶುಕ್ರವಾರ ಪಶ್ಚಿಮ ತ್ರಿಪುರಾ, ಸೆಪಹಿಜಾಲಾ ಮತ್ತು ಖೋವೈಯ ಸೇರಿದಂತೆ ವಿವಿಧ ಚುನಾವಣೋತ್ತರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ ಎಂದು ಸಿಪಿಐ(ಎಂ) ಹೇಳಿತ್ತು.

ಸಿಪಿಐ(ಎಂ) ಸಂಸದ ಇ ಕರೀಂ ಮತ್ತು ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನೊಳಗೊಂಡ ನಿಯೋಗ ನೆಹಲ್‌ಚಂದ್ರಂಗಾರ್ ಮಾರುಕಟ್ಟೆಗೆ ಬಂದಿಳಿದಾಗ ಅವರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು, 'ಭಾರತ್ ಮಾತಾ ಕಿ ಜೈ' ಘೋಷಣೆಗಳನ್ನು ಕೂಗಿದರು.

ಘಟನೆಯನಲ್ಲಿ ಒಂದು ವಾಹನಕ್ಕೆ ತೀವ್ರ ಹಾನಿಯಾಗಿದ್ದು, ಇನ್ನೂ ಎರಡು ಕಾರುಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹಿರಿಯ ಸಿಪಿಐ(ಎಂ) ನಾಯಕ ರಾಖಾಲ್ ಮಜುಂದಾರ್ ಹೇಳಿದ್ದಾರೆ.

ಬುಧವಾರ ರಾತ್ರಿ ಈ ಪ್ರದೇಶದಲ್ಲಿ ಕನಿಷ್ಠ 20 ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ದಾಳಿಯಲ್ಲಿ ತಂಡದ ಎಂಟು ಸದಸ್ಯರಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಮತ್ತು ಎಡಪಕ್ಷಗಳು ಮತ್ತು ಕಾಂಗ್ರೆಸ್ ನಾಯಕರಿದ್ದ ಎರಡು-ಮೂರು ವಾಹನಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಂಡವು ಮಾರ್ಚ್ 12 ರವರೆಗೆ ರಾಜ್ಯದಲ್ಲಿ ಉಳಿಯುವ ನಿರೀಕ್ಷೆಯಿದೆ. ನಂತರ ಅದು ವರದಿಯನ್ನು ಸಲ್ಲಿಸಲಿದೆ ಮತ್ತು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಗುವುದು ಎಂದು ಸಿಪಿಐ ಸಂಸದ ಬಿನೋಯ್ ವಿಶ್ವಂ ಹೇಳಿದ್ದಾರೆ.

ಚುನಾವಣೋತ್ತರ ಹಿಂಸಾಚಾರದ ಹೆಚ್ಚಿನ ಪ್ರಕರಣಗಳು ಇಲ್ಲಿಯವರೆಗೆ ಸೆಪಹಿಜಾಲಾ ಮತ್ತು ಖೋವೈ ಜಿಲ್ಲೆಗಳಿಂದ ವರದಿಯಾಗಿವೆ.

ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಗುಂಪು ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮಾಣಿಕ್ ಸಹಾ ಪೊಲೀಸರಿಗೆ ಸೂಚಿಸಿದ್ದಾರೆ.

ಮಾರ್ಚ್ 2 ರಂದು ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಯಿತು ಮತ್ತು ಬಿಜೆಪಿ-ಐಪಿಎಫ್‌ಟಿ ಸರ್ಕಾರವು ಸತತ ಎರಡನೇ ಅವಧಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT