ದೇಶ

ಅದಾನಿ ಗ್ರೂಪ್ ವಿವಾದ: ಜೆಪಿಸಿ ತನಿಖೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ, ಸಂಸತ್ ನ ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

Nagaraja AB

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಆರೋಪ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರು ಸೋಮವಾರ ಬಿಗಿ ಪಟ್ಟು ಹಿಡಿದ್ದರಿಂದ ಸಂಸತ್ ನ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಭಾರತ್ ಜೋಡೋ ಯಾತ್ರೆಯ ವೇಳೆ ಮಾಡಿದ ಭಾಷಣದ ಬಗ್ಗೆ ಮಾಹಿತಿ ಪಡೆಯಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ ವಿಷಯವನ್ನು ಪ್ರಸ್ತಾಪಿಸಲು ನಿರ್ಣಯವನ್ನು ಮಂಡಿಸಿದರು. ಈ ವೇಳೆ ಪ್ರತಿಪಕ್ಷಗಳು ಘೋಷಣೆ ಕೂಗಿ ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಅತ್ತ ರಾಜ್ಯಸಭೆಯಲ್ಲಿ ಅದಾನಿ ಗ್ರೂಪ್ ವಿವಾದ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ ರಚನೆಯಲ್ಲಿ ಸರ್ಕಾರದ ವಿಫಲತೆ ಕುರಿತು ಚರ್ಚಿಸಲು ನಿಯಮ 267ರ ಅಡಿ  ಚರ್ಚೆಗೆ ಅವಕಾಶ ನೀಡಬೇಕೆಂದು ನೀರಾಜ್ ದಂಗಿ, ಡಾ. ಅಮಿ ಯಜ್ನಿಕ್ ಮತ್ತು ಸಯ್ಯದ್ ನಸೀರ್ ಹುಸೈನ್ ಮನವಿ ಮಾಡಿದರು. ಆದರೆ, ಇದಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಸದನದಲ್ಲಿ ಗದ್ದಲ ಉಂಟಾಯಿತು. ಇದರಿಂದಾಗಿ ಸಭಾಪತಿ ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಮುಂದೂಡಿದರು.

ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿರುವ ಹೇಳಿಕೆ ಕುರಿತು ಕ್ಷಮೆಯಾಚಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದರೆ, ಅದಾನಿ ವಿವಾದ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಇದೇ ವಿಚಾರವಾಗಿ ಕಳೆದ ಶುಕ್ರವಾರವೂ ಸಂಸತ್ ನ ಉಭಯ ಸದನಗಳ ಕಲಾಪವನ್ನು ಇಂದಿಗೆ ಮುಂದೂಡಲಾಗಿತ್ತು.
 

SCROLL FOR NEXT