ದೇಶ

ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ

Nagaraja AB

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು  ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ಕುಸ್ತಿಪಟು ಬಜರಂಗ್ ಫುನಿಯಾ, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರು ನಮ್ಮ ಮೇಲೆ ಬಲ ಪ್ರಯೋಗ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ನಮಗೆ ಇಡೀ ದೇಶದ ಬೆಂಬಲದ ಅಗತ್ಯವಿದೆ. ಎಲ್ಲರೂ ದೆಹಲಿಗೆ ಬರಬೇಕು ಎಂದು ಮನವಿ ಮಾಡಿದರು. 

ಘರ್ಷಣೆ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ಪ್ರಣವ್ ತಾಯಲ್, ಆಪ್ ನಾಯಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆ ಸಮೇತ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಆಗ ಉದ್ರಿಕ್ತರಾದ ಪ್ರತಿಭಟನಾಕಾರರು ಟ್ರಕ್ ನಿಂದ ಬೆಡ್ ಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ತದನಂತರ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಸೋಮನಾಥ್ ಭಾರ್ತಿ  ಅವರೊಂದಿಗೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. 

SCROLL FOR NEXT