ದೇಶ

ಮಣಿಪುರದ ಪರಿಸ್ಥಿತಿ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್, ರಾಷ್ಟ್ರಪತಿ ಆಳ್ವಿಕೆ ಹೇರಲು ಕರೆ

Ramyashree GN

ನವದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದ ನಂತರ ಮಣಿಪುರದ ಮತದಾರರು 'ತೀವ್ರ ದ್ರೋಹ'ವನ್ನು ಅನುಭವಿಸುತ್ತಿದ್ದಾರೆ ಮತ್ತು ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾಗಿರುವ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಮಣಿಪುರದಲ್ಲಿ ಕಳೆದ ವಾರ ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೇಟಿ ಸಮುದಾಯದ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದ್ದು, ಇದು ಇಲ್ಲಿಯವರೆಗೆ ಸಾವಿರಾರು ಜನರನ್ನು ಸ್ಥಳಾಂತರಿಸಿದೆ ಮತ್ತು ಕನಿಷ್ಠ 54 ಜನರ ಸಾವಿಗೆ ಕಾರಣವಾಗಿದೆ.

'ಮಣಿಪುರದ ಹಿಂಸಾಚಾರ ಮುಂದುವರಿದಂತೆ, ನಮಗೆ ನೀಡಲಾಗಿದ್ದ ಉತ್ತಮ ಆಡಳಿತದ ಭರವಸೆ ಏನಾಯಿತು ಎಂದು ಎಲ್ಲಾ ಸರಿಯಾದ ಚಿಂತನೆಯುಳ್ಳ ಭಾರತೀಯರು ತಮ್ಮನ್ನು ತಾವು ಕೇಳಿಕೊಳ್ಳಬೇಕು' ಎಂದು ತರೂರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

'ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಕೇವಲ ಒಂದು ವರ್ಷದ ನಂತರ ಘೋರ ದ್ರೋಹವನ್ನು ಅನುಭವಿಸುತ್ತಿದ್ದಾರೆ. ಇದು ರಾಷ್ಟ್ರಪತಿ ಆಳ್ವಿಕೆಯ ಸಮಯ; ರಾಜ್ಯ ಸರ್ಕಾರ ತಾನು ಭರವಸೆ ನೀಡಿದಂತೆ ಕೆಲಸ ಮಾಡುವಲ್ಲಿ ವಿಫಲವಾಗಿದೆ' ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

ರಾಜ್ಯದ ಜನಸಂಖ್ಯೆಯ ಶೇ 53ರಷ್ಟಿರುವ ಬುಡಕಟ್ಟು ಜನಾಂಗದವರಲ್ಲದ ಮೇಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟಿಸಲು ಅಖಿಲ ಬುಡಕಟ್ಟು ವಿದ್ಯಾರ್ಥಿ ಸಂಘ ಮಣಿಪುರ (ಎಟಿಎಸ್‌ಯುಎಂ) ಬುಧವಾರ ರಾಜ್ಯದ ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು. 

ಮೇಟಿ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಬೇಕೆಂಬ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನಂತರ ಈ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

ಚುರಾಚಂದ್‌ಪುರ ಜಿಲ್ಲೆಯ ಟೊರ್ಬಂಗ್ ಪ್ರದೇಶದಲ್ಲಿ ನಡೆದ ಮೆರವಣಿಗೆ ವೇಳೆ ಶಸ್ತ್ರಸಜ್ಜಿತ ಗುಂಪೊಂದು ಮೇಟಿ ಸಮುದಾಯದ ಜನರ ಮೇಲೆ ಏಕಾಏಕಿ ದಾಳಿ ನಡೆಸಿತು. ಇದು ಕಣಿವೆ ಜಿಲ್ಲೆಗಳಲ್ಲಿ ಪ್ರತೀಕಾರದ ದಾಳಿಗೆ ಕಾರಣವಾಯಿತು. ಇದು ರಾಜ್ಯದಾದ್ಯಂತ ಹಿಂಸಾಚಾರವನ್ನು ಹೆಚ್ಚಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT