ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಕರೆದಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಬಜರಂಗ ಬಲಿ ಬಿಜೆಪಿಗೆ ಗದಾ ಪ್ರಹಾರ ಮಾಡಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಪ್ರಚಾರದ ವೇಳೆಯಲ್ಲಿ ಬಜರಂಗ ದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಜೈ ಬಜರಂಗ ಬಲಿ ಘೋಷಣೆ ಕೂಗಿ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದರು. ಆದ್ದರಿಂದ ಈ ಚುನಾವಣಾ ಫಲಿತಾಂಶದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ಸೋಲಾಗಿದೆ ಎಂದರು.
ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023 LIVE UPDATES: ಕಾಂಗ್ರೆಸ್ ಗೆ ಭರ್ಜರಿ ಬಹುಮತ, ಬಿಜೆಪಿ, ಜೆಡಿಎಸ್ ಗೆ ಮುಖಭಂಗ
ಕರ್ನಾಟಕದಲ್ಲಿ ಏನು ನಡೆದಿದೆಯೋ ಅದು 2024 ರ ಲೋಕಸಭೆ ಚುನಾವಣೆಯಲ್ಲಿ ನಿಖರವಾಗಿ ನಡೆಯಲಿದೆ ಎಂದು ಹೇಳಿದರು. "ಕರ್ನಾಟಕ ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಲೋಕಸಭಾ ಚುನಾವಣೆಯ ಫಲಿತಾಂಶಗಳಿಗೆ ದಿಕ್ಸೂಚಿಯಾಗಿದೆ ಎಂದು ಸಂಜಯ್ ರಾವತ್ ಹೇಳಿದರು.