ದೇಶ

ಕೇಂದ್ರ vs ದೆಹಲಿ ಸರ್ಕಾರ: ಮೇ 11ರ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿ

Ramyashree GN

ನವದೆಹಲಿ: ಸಾರ್ವಜನಿಕ ಭದ್ರತೆ, ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಯ ವಿಷಯಗಳನ್ನು ಹೊರತುಪಡಿಸಿ ದೆಹಲಿ ಸರ್ಕಾರವು ಇತರೆಲ್ಲ ಸೇವೆಗಳಿಗೆ ಸಂಬಂಧಿಸಿದ ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ ಎಂದು ಮೇ 11ರಂದು ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಸಾರ್ವಜನಿಕ ಭದ್ರತೆ, ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಯ ವಿಷಯಗಳನ್ನು ಹೊರತುಪಡಿಸಿ ದೆಹಲಿ ಸರ್ಕಾರವು ಇತರೆಲ್ಲ ಸೇವೆಗಳಿಗೆ ಸಂಬಂಧಿಸಿದ ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್‌‌ನ ಸಾಂವಿಧಾನಿಕ ಪೀಠವು ಗುರುವಾರ (ಮೇ 11) ಸರ್ವಾನುಮತದ ತೀರ್ಪು ನೀಡಿದೆ. 

ಈ ಮಹತ್ವದ ತೀರ್ಪಿನಿಂದಾಗಿ ಕೇಂದ್ರ ಹಾಗೂ ದೆಹಲಿ ಸರ್ಕಾರದ ನಡುವಿನ ಅಧಿಕಾರ ವ್ಯಾಪ್ತಿಯ ಸಂಘರ್ಷದಲ್ಲಿ ಎಎಪಿ ಸರ್ಕಾರದ ಕೈ ಮೇಲಾಗಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯಲ್ಲಿ, ತೀರ್ಪಿನ 'ದಾಖಲೆಯಲ್ಲಿ ಸ್ವಷ್ಟವಾಗಿ ಗೋಚರಿಸುವ ದೋಷಗಳಿವೆ ಮತ್ತು ಮರುಪರಿಶೀಲನಾ ಅರ್ಜಿದಾರರು ಸಲ್ಲಿಸಿದ ವಾದಗಳನ್ನು ಅಥವಾ ಪ್ರಕರಣವನ್ನು ತೀರ್ಪು ಸಮರ್ಪಕವಾಗಿ ಪರಿಗಣಿಸಿಲ್ಲ' ಎಂದು ಹೇಳಿದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು, ಜನರಿಂದ ಆಯ್ಕೆಯಾದ ಚುನಾಯಿತ ಸರ್ಕಾರವು ಆಡಳಿತಾತ್ಮಕ ವಿಷಯಗಳ ಮೇಲೆ ನಿಯಂತ್ರಣ ಹೊಂದಿರಬೇಕು. ದೆಹಲಿ ಕೇಂದ್ರಾಡಳಿತ ಪ್ರದೇಶ ವಿಶೇಷ ಅಗತ್ಯತೆಗಳನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ಮೇಲಿನ ತನ್ನ ನಿಯಂತ್ರಣವನ್ನು ಪ್ರತಿಪಾದಿಸುವ 2015ರ ಗೃಹ ಸಚಿವಾಲಯದ ಅಧಿಸೂಚನೆಯಿಂದ ಪ್ರಚೋದಿಸಲ್ಪಟ್ಟ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ವಿವಾದವನ್ನು ಕೊನೆಗೊಳಿಸಿದೆ.

SCROLL FOR NEXT