ದೇಶ

ಹೈದರಾಬಾದ್‌: ನಾಮಪತ್ರ ಸಲ್ಲಿಕೆ ವೇಳೆ ಬಿಆರ್‌ಎಸ್, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ; 15 ಮಂದಿಗೆ ಗಾಯ

Lingaraj Badiger

ಹೈದರಾಬಾದ್‌: ಹೈದರಾಬಾದ್‌ನ ಇಬ್ರಾಹಿಂಪಟ್ಟಣದಲ್ಲಿ ಗುರುವಾರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಡುವೆ ಘರ್ಷಣೆ ನಡೆದಿದ್ದು, ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 15 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮಾಲರೆಡ್ಡಿ ರಂಗಾರೆಡ್ಡಿ ಮತ್ತು ಬಿಆರ್‌ಎಸ್ ಅಭ್ಯರ್ಥಿ ಮಂಚಿರೆಡ್ಡಿ ಕಿಶನ್ ರೆಡ್ಡಿ ಅವರು ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಆಗಮಿಸುತ್ತಿದ್ದಾಗ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಎರಡೂ ಪಕ್ಷಗಳ ಕಾರ್ಯಕರ್ತರು ರಸ್ತೆ ದಾಟುತ್ತಿದ್ದಾಗ ಘೋಷಣೆಗಳನ್ನು ಕೂಗಿ ಏಕಾಏಕಿ ಪರಸ್ಪರ ಕಲ್ಲು ತೂರಾಟ ನಡೆಸಿದರು.

ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು ಎಂದು ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಎರಡೂ ಪಕ್ಷಗಳ 10 ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಲ್ಲು ತೂರಾಟದಲ್ಲಿ ಐವರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಮತ್ತು ಒಂದು ವಾಹನ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

"ಅವರಿಬ್ಬರೂ(ಅಭ್ಯರ್ಥಿಗಳು) ಅನುಮತಿ ಪಡೆದಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯ ಜನ/ಬೆಂಬಲಿಗರು ಮತ್ತು ವಾಹನಗಳೊಂದಿಗೆ ಆಗಮಿಸಿದ್ದರು. ಅವರಿಗೆ ನಾಮಪತ್ರ ಸಲ್ಲಿಸಲು ವಿಭಿನ್ನ ಸಮಯ ನಿಗದಿಪಡಿಸಲಾಗಿತ್ತು. ಆದರೆ, ಅವರು ಅದನ್ನು ಅನುಸರಿಸದೇ ಇಬ್ಬರೂ ಏಕಕಾಲಕ್ಕೆ ಆಗಮಿಸಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT