ದೇಶ

ಉತ್ತರಕಾಶಿ ಸುರಂಗ ಕುಸಿತ: ಪೈಪ್ ಅಳವಡಿಕೆ ಕಾರ್ಯ ಪೂರ್ಣ, ಶೀಘ್ರ ಕಾರ್ಮಿಕರ ರಕ್ಷಣೆ - ಸಿಎಂ ಧಾಮಿ

Lingaraj Badiger

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗಾಗಿ ಪೈಪ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಂಗಳವಾರ ಹೇಳಿದ್ದಾರೆ.

"... ಸುರಂಗದೊಳಗೆ ಪೈಪ್ ಅಳವಡಿಸುವ ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲೇ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗುವುದು" ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದ ಸ್ಥಳದಲ್ಲಿ ಕಳೆದ 17 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಸುರಂಗದಲ್ಲಿ 60 ಮೀಟರ್‌ಗಳಷ್ಟು ಅವಶೇಷಗಳನ್ನು ಭೇದಿಸಿದ ರಕ್ಷಣಾ ಕಾರ್ಯಕರ್ತರು, 41 ಕಾರ್ಮಿಕರ ಸಂಕಷ್ಟವನ್ನು ಕೊನೆಗೊಳಿಸಿದ್ದಾರೆ. ಸ್ಥಳಕ್ಕೆ ಸಿಎಂ ಧಾಮಿ ಸಹ ಆಗಮಿಸಿದ್ದಾರೆ.

ಸ್ಥಳದಲ್ಲಿದ್ದ ಉತ್ತರಾಖಂಡದ ಹಿರಿಯ ಅಧಿಕಾರಿಯೊಬ್ಬರು ಕೊರೆಯು ಕಾರ್ಯ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.

ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಿದ ನಂತರ ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿಲ್ಕ್ಯಾರಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಮಿಕರಿಗಾಗಿ 41 ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಒಳಗೊಂಡ ಪ್ರತ್ಯೇಕ ವಾರ್ಡ್ ಅನ್ನು ಸಿದ್ಧಪಡಿಸಲಾಗಿದೆ.

ಕಳೆದ ಹದಿನೈದು ದಿನಗಳಿಂದ ಭಾರೀ ವಾಹನಗಳ ನಿಯಮಿತ ಸಂಚಾರದಿಂದಾಗಿ ಸುರಂಗಕ್ಕೆ ತೆರಳು ರಸ್ತೆ ಸಂಪೂರ್ಣ ಹಾಳಾಗಿದ್ದು, ಅದನ್ನು ದುರಸ್ತಿ ಮಾಡಲಾಗುತ್ತಿದೆ. ಈ ಮೂಲಕ ಆಂಬ್ಯುಲೆನ್ಸ್‌ಗಳ ಸುಗಮ ಸಂಚಾರಕ್ಕಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.

SCROLL FOR NEXT