ದೇಶ

ತೆಲಂಗಾಣ: ಸರ್ಕಾರಿ ಶಾಲೆ ಮಕ್ಕಳಿಗಾಗಿ 'ಮುಖ್ಯಮಂತ್ರಿ ಉಪಹಾರ ಯೋಜನೆ' ಆರಂಭ

Shilpa D

ಹೈದರಾಬಾದ್: ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಬೆಳಗ್ಗಿನ ತಿಂಡಿ ನೀಡುವ 'ಮುಖ್ಯಮಂತ್ರಿ ಉಪಹಾರ ಯೋಜನೆ'ಗೆ ತೆಲಂಗಾಣದಲ್ಲಿ ಶುಕ್ರವಾರ ಚಾಲನೆ ದೊರೆತಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 23 ಲಕ್ಷ ಮಕ್ಕಳಿಗೆ ನಿತ್ಯವೂ ಆಹಾರ ಒದಗಿಸುವ ಗುರಿ ಈ ಯೋಜನೆಯದ್ದು. ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಖಾತೆ ಸಚಿವ ಕೆ.ಟಿ.ರಾಮ ರಾವ್‌ ಅವರು ರಾಜ್ಯದ ವಿವಿಧ ಸ್ಥಳಗಳಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿರುವ ಅವರು, ರಾಜ್ಯದಾದ್ಯಂತ ಇರುವ 27,147 ಶಾಲೆಗಳಲ್ಲಿಯೂ ದಸರಾ ರಜೆಯ ನಂತರ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಇದನ್ನು ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದಿದ್ದಾರೆ.

'ಪೌಷ್ಠಿಕಾಂಶವುಳ್ಳ ಹಾಗೂ ರುಚಿಕಟ್ಟಾದ ಉಪಹಾರ ನೀಡಲಾಗುವುದು' ಎಂದಿರುವ ರಾವ್‌, ಆಹಾರದ ಗುಣಮಟ್ಟ ಕಾಪಾಡಬೇಕು. ಅದಕ್ಕಾಗಿ ನಿಯಮಿತವಾಗಿ ಹಾಗೂ ನಿರಂತರವಾಗಿ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

20 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. 1 ರಿಂದ 10 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಉಪಹಾರ ನೀಡುವ ಏಕೈಕ ರಾಜ್ಯ ತೆಲಂಗಾಣವಾಗಿದೆ ಎಂದು ಶ್ರೀ ಹರೀಶ್ ರಾವ್ ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ ಹರಿಸುವುದರಿಂದ ಶಾಲಾ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಬಹುದು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳಿಗೆ ದಾಖಲಾದ ಹೆಚ್ಚಿನ ಮಕ್ಕಳು ಕಡಿಮೆ ಆದಾಯವಿರುವ ಕುಟುಂಬದಿಂದ ಬಂದವರಾಗಿರುತ್ತಾರೆ. ಪೋಷಕರು ತಮ್ಮ ಆಹಾರದ ಬಗ್ಗೆ ಚಿಂತಿಸದೆ ಸಮಯಕ್ಕೆ ಸರಿಯಾಗಿ ಶಾಲೆಗೆ ಕಳುಹಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಪ್ರತಿದಿನ ಪೌಷ್ಟಿಕ ಆಹಾರ ಸಿಗುತ್ತದೆ, ಇದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸುತ್ತದೆ. ಪ್ರತಿ 10 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಉಪಾಹಾರ ಸೇವಿಸಿದರೆ ಉಳಿದವರು ಖಾಲಿ ಹೊಟ್ಟೆಯಲ್ಲಿ ಶಾಲೆಗಳಿಗೆ ಬರುತ್ತಾರೆ ಎಂದು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ತಾನು ತಿಳಿದುಕೊಂಡಿದ್ದೇನೆ ಎಂದು ಅವರು ಹೇಳಿದರು. ಇಂತಹ ವಿದ್ಯಾರ್ಥಿಗಳ ನೋವನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

SCROLL FOR NEXT