ಮುಂಬೈ: ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂಬ ಭಾವನೆ ಇದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶನಿವಾರ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರದ್ ಪವಾರ್, ಇತ್ತೀಚಿನ ವಿಧಾನಸಭಾ ಚುನಾವಣೆಯ ಟ್ರೆಂಡ್ ಪ್ರತಿಪಕ್ಷಗಳಿಗೆ ಅನುಕೂಲಕರವಾಗಿದೆ ಎಂದು ಸೂಚಿಸುತ್ತಿದೆ. ಆದರೆ ಇದು ರಾಷ್ಟ್ರ ಮಟ್ಟದಲ್ಲಿ ಬದಲಾವಣೆ ತರಲಿದೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಲು ತಮ್ಮ ಬಳಿ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದಿದ್ದಾರೆ.
ಇದನ್ನು ಓದಿ: ಮುಂಬರುವ ಚುನಾವಣೆಗಳು: ಐಟಿ ದಾಳಿಯಿಂದ ರಾಜ್ಯ ರಾಜಕೀಯದಲ್ಲಿ ತಲ್ಲಣ; ತಂತ್ರಗಾರಿಕೆಗೆ ಕಾಂಗ್ರೆಸ್ ನಾಯಕರು ಮುಂದು!
ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಪಂಜಾಬ್ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ಇಲ್ಲ ಎಂದು ಅವರು ಹೇಳಿದರು.
"ನಮ್ಮಲ್ಲಿ ಕೆಲವು ಅಭಿಪ್ರಾಯಗಳಿವೆ. ಬಹುತೇಕರು(ವಿರೋಧ ಪಕ್ಷಗಳು) ಸಂಸತ್ ಚುನಾವಣೆಗೆ(ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ) ಎಲ್ಲರೂ ಒಗ್ಗೂಡಬೇಕೆಂದು ಹೇಳುತ್ತಿದ್ದಾರೆ ಎಂದರು ಪವಾರ್ ತಿಳಿಸಿದ್ದಾರೆ.
ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಮುಖ ಪಕ್ಷವಾಗಿದ್ದು, ಅಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಕೆಲವು ಭಿನ್ನಾಭಿಪ್ರಾಯಗಳಿವೆ. ಅದನ್ನು ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ಸಲಹೆ ನೀಡಿದ್ದಾರೆ.