ದೇಶ

ದೆಹಲಿ ಗಲಭೆ: ಜಾಮೀನು ಕೋರಿ ಉಮರ್ ಖಾಲಿದ್ ಅರ್ಜಿ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Ramyashree GN

ನವದೆಹಲಿ: 2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾರಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಜಾಮೀನು ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಂದೂಡಿದೆ.

ಖಾಲಿದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಗೈರಾದ ಕಾರಣದಿಂದಾಗಿ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಿಚಾರಣೆಯನ್ನು ಒಂದು ವಾರ ಮುಂದೂಡಿತು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆಗಸ್ಟ್ 9 ರಂದು ಖಾಲಿದ್ ಅವರ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.

ಈ ವಿಷಯದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌ನ 2022ರ ಅಕ್ಟೋಬರ್ 18ರ ಆದೇಶವನ್ನು ಪ್ರಶ್ನಿಸಿ ಖಾಲಿದ್ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಖಾಲಿದ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಅವರಿನ್ನು ಇತರ ಸಹ ಆರೋಪಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಮತ್ತು ಅವರ ವಿರುದ್ಧದ ಆರೋಪಗಳು ಪ್ರಾಥಮಿಕವಾಗಿ ನಿಜವಾಗಿವೆ ಎಂದು ಹೇಳಿತ್ತು. 

ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಹಲವರ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಹಲವಾರು ನಿಬಂಧನೆಗಳ ಅಡಿಯಲ್ಲಿ 2020ರ ಫೆಬ್ರುವರಿಯಲ್ಲಿ ಗಲಭೆಯ 'ಮಾಸ್ಟರ್‌ಮೈಂಡ್‌ಗಳು' ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. 

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ 53 ಜನರು ಸಾವಿಗೀಡಾಗಿ, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

2020ರ ಸೆಪ್ಟೆಂಬರ್‌ನಲ್ಲಿ ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟ ಖಾಲಿದ್, ಹಿಂಸಾಚಾರದಲ್ಲಿ ಯಾವುದೇ ಕ್ರಿಮಿನಲ್ ಪಾತ್ರವನ್ನು ಹೊಂದಿಲ್ಲ ಅಥವಾ ಪ್ರಕರಣದ ಯಾವುದೇ ಆರೋಪಿಗಳೊಂದಿಗೆ ಯಾವುದೇ 'ಪಿತೂರಿಯ ಸಂಪರ್ಕ' ಹೊಂದಿಲ್ಲ ಎಂಬ ಆಧಾರದ ಮೇಲೆ ಜಾಮೀನು ಕೋರಿದ್ದರು.

ದೆಹಲಿ ಪೊಲೀಸರು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯನ್ನು ವಿರೋಧಿಸಿದ್ದರು. ಅವರು ಮಾಡಿದ ಭಾಷಣವು 'ಪೂರ್ವ ನಿಯೋಜಿತ' ಮತ್ತು ಅವರು ಬಾಬರಿ ಮಸೀದಿ, ತ್ರಿವಳಿ ತಲಾಖ್, ಕಾಶ್ಮೀರ, ಮುಸ್ಲಿಮರ ನಿಗ್ರಹ ಮತ್ತು ಸಿಎಎ ಮತ್ತು ಎನ್‌ಆರ್‌ಸಿಯಂತಹ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿದರು ಎಂದು ತಿಳಿಸಿದ್ದರು.

SCROLL FOR NEXT