ವಿದ್ಯಾರ್ಥಿಗಳೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 
ದೇಶ

ದಲಿತ ಅಡುಗೆಯವರು ತಯಾರಿಸಿದ ಉಪಹಾರ ಸೇವನೆಗೆ ಕರೂರು ಶಾಲೆಯ ವಿದ್ಯಾರ್ಥಿಗಳ ನಿರಾಕರಣೆ!

ತಮಿಳುನಾಡು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಉಪಹಾರ ಯೋಜನೆ ಒದಗಿಸಲಾಗಿದ್ದು, ಕರೂರಿನ ಸರ್ಕಾರಿ ಶಾಲೆಯ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ದಲಿತ ಅಡುಗೆಯವರೊಬ್ಬರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ.

ಚೆನ್ನೈ: ತಮಿಳುನಾಡು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಉಪಹಾರ ಯೋಜನೆ ಒದಗಿಸಲಾಗಿದ್ದು, ಕರೂರಿನ ಸರ್ಕಾರಿ ಶಾಲೆಯ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ದಲಿತ ಅಡುಗೆಯವರೊಬ್ಬರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ.

ಕರೂರು ಜಿಲ್ಲೆಯ ಅರವಕುರಿಚಿ ಸಮೀಪದ ವೆಲಂಚೆಟ್ಟಿಯೂರ್ ಗ್ರಾಮದಲ್ಲಿರುವ ಪಂಚಾಯತ್ ಯೂನಿಯನ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಹಿಂದುಳಿದ ಜಾತಿ ಮತ್ತು ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದ ಕೆಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸಿದ್ದಾರೆ. ಪರಿಶಿಷ್ಟ ಜಾತಿಯ ಮಹಿಳೆ ಸುಮತಿ ಎಂಬುವವರು ತಯಾರಿಸಿದ ಆಹಾರವನ್ನು ತಿನ್ನದಂತೆ ತಡೆಯಲು ಹೀಗೆ ಮಾಡಿದ್ದಾರೆ ಎನ್ನಲಾಗಿದೆ.

ಒಗ್ಗಟ್ಟಿನ ಸೂಚಕವಾಗಿ ಜಿಲ್ಲಾಧಿಕಾರಿ ಟಿ. ಪ್ರಭು ಶಂಕರ್ ಶಾಲೆಗೆ ಭೇಟಿ ನೀಡಿ ಸುಮತಿ ಅವರು ತಯಾರಿಸಿದ ಆಹಾರವನ್ನು ಸೇವಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರನ್ನು ಭೇಟಿಯಾದ ಅವರು ಸರ್ಕಾರದಿಂದ ನೇಮಕಗೊಂಡ ಅಡುಗೆಯವರ ವಿರುದ್ಧ ತಾರತಮ್ಯವನ್ನು ಮುಂದುವರೆಸಿದರೆ, ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗ್ರಾಮದ ಮೂರಕ್ಕೂ ಹೆಚ್ಚು ಹಿಂದುಳಿದ ಸಮುದಾಯಗಳು ಸುಮತಿ ಅಡುಗೆ ತಯಾರಿಸುವುದನ್ನು ವಿರೋಧಿಸಿವೆ. ಆಕೆಯ ವಿರುದ್ಧ ಬಹಿಷ್ಕಾರ ಹಾಕಿರುವುದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಿಲ್ಲಾಧಿಕಾರಿಯೊಂದಿಗೆ ಚರ್ಚೆಯ ನಂತರ, ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಉಪಹಾರ ಯೋಜನೆಯ ಅನುಕೂಲ ಪಡೆಯಲು ಕಳುಹಿಸಲು ಒಪ್ಪಿಕೊಂಡರು. ಅತ್ಯಂತ ಹಿಂದುಳಿದ ವರ್ಗದ ಸಮುದಾಯದ ಓರ್ವ ವ್ಯಕ್ತಿ ಮಾತ್ರ ತನ್ನ ಮಕ್ಕಳಿಗೆ ಅಲ್ಲಿ ಉಪಹಾರ ಸೇವಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಟಿಎನ್ಎಂ ವರದಿ ಪ್ರಕಾರ, ನಂತರ ಆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಮಹಿಳೆ ವಿರುದ್ಧ ಜಾತಿ ತಾರತಮ್ಯ ಎಸಗಿದ್ದಕ್ಕಾಗಿ ಆತನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಕೈಗೊಳ್ಳಬಹುದಾದ ಸಂಭವನೀಯ ಕ್ರಮಗಳ ಬಗ್ಗೆ ಎಚ್ಚರಿಕೆ ನೀಡಲಾಯಿತು. ನಂತರ ಆತನನ್ನು ಬಿಡಲಾಯಿತು.
ಒಂದು ವೇಳೆ ಮತ್ತೊಮ್ಮೆ ನಿಯಮ ಪಾಲಿಸದಿದ್ದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಹೊಸ ಉಪಹಾರ ಉಪಕ್ರಮವನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ 25ರಂದು ಪರಿಚಯಿಸಿದರು. ರಾಜ್ಯದಾದ್ಯಂತ ಒಟ್ಟು 17 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯಡಿ ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಗೆ ತಮಿಳುನಾಡು ಸರ್ಕಾರ 404.41 ಕೋಟಿ ರೂ. ಮೀಸಲಿಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT