ದೇಶ

ರಾಷ್ಟ್ರಪತಿ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ಖರ್ಗೆ ಗೆ ಆಹ್ವಾನವಿಲ್ಲ

Nagaraja AB

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಆಯೋಜಿಸಿರುವ ಜಿ- 20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಿಲ್ಲ. ಜಿ-20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಉಲ್ಲೇಖದ ವಿವಾದ ನಂತರ ಈ ಬೆಳವಣಿಗೆ ನಡೆದಿದೆ. 

ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು, ಮತ್ತು ಪ್ರತಿಪಕ್ಷದ ಆಡಳಿತವಿರುವ ರಾಜ್ಯಗಳು ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಇದರಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಲಿದ್ದಾರೆ. ಆದರೆ, ಖರ್ಗೆಗೆ ಮಾತ್ರ ಆಹ್ವಾನವಿಲ್ಲ. 

ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಖರ್ಗೆ ಅವರ ಕಚೇರಿಯ ಮೂಲಗಳು ತಿಳಿಸಿವೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ವಿಪಕ್ಷ ನಾಯಕರೊಬ್ಬರು, ವಿರೋಧ ಪಕ್ಷಗಳ ಅಥವಾ ಸದನದ ಯಾವುದೇ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ.

ಕ್ಯಾಬಿನೆಟ್ ಸಚಿವ ಸ್ಥಾನವನ್ನೂ ಹೊಂದಿರುವ ಖರ್ಗೆ ಅವರನ್ನು ಆಹ್ವಾನಿತರ ಪಟ್ಟಿಯಿಂದ ಹೊರಗಿಟ್ಟಿರುವುದು ವಿವಿಧ ವಿಷಯಗಳಲ್ಲಿ ಭಿನ್ನಾಭಿಪ್ರಾಯದಲ್ಲಿರುವ ವಿರೋಧ ಪಕ್ಷಗಳು ಮತ್ತು  ಮೋದಿ ಸರ್ಕಾರದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಬಹುದು ಎಂದರು. ಜಿ-20 ಶೃಂಗಸಭೆಯನ್ನು ಭಾರತಕ್ಕಾಗಿ ರಾಜಕೀಯ ಲಾಭಕ್ಕಾಗಿ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಔತಣಕೂಟಕ್ಕೆ ಹಾಜರಾಗುವುದನ್ನು ಖಚಿತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದ ಮಲ್ಟಿ ಫಂಕ್ಷನ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಸೇರಿದಂತೆ ಹಲವಾರು ಕೈಗಾರಿಕೋದ್ಯಮಿಗಳೂ ಅತಿಥಿ ಪಟ್ಟಿಯಲ್ಲಿದ್ದಾರೆ.ದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಲ್ಲಿ 40ಕ್ಕೂ ಹೆಚ್ಚು ನಿಯೋಗಗಳು ಭಾಗವಹಿಸುವ ನಿರೀಕ್ಷೆಯಿದೆ.

SCROLL FOR NEXT