ದೇಶ

ಕಾನೂನಿನ ಮುಂದೆ ಎಲ್ಲರೂ ಸಮಾನರು: ನಾಯ್ಡು ಬಂಧನದ ಬಗ್ಗೆ ಮೌನ ಮುರಿದ ಆಂಧ್ರ ಸಿಎಂ ಜಗನ್

Lingaraj Badiger

ವಿಜಯವಾಡ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಕೊನೆಗೂ ಮೌನ ಮುರಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿದ್ದಾರೆ.

ನಾಯ್ಡು ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳೊಂದಿಗೆ ಸಿಕ್ಕಿಬಿದ್ದಿದ್ದರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆಂಧ್ರ ಸಿಎಂ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕನ ಬಂಧನದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ರಾಜಕೀಯ ಸಿದ್ಧಾಂತಕ್ಕೆ ಮೋಸ ಮಾಡಿದ್ದಾರೆ ಮತ್ತು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಗೋದಾವರಿ ಜಿಲ್ಲೆಯ ನಿಡದವೋಲುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಜಗನ್, ದುರದೃಷ್ಟವಶಾತ್, ನಾಯ್ಡು ಅವರ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪುರಾವೆಗಳಿದ್ದರೂ, ಪ್ರಭಾವಿ ಗ್ಯಾಂಗ್ ಅವರ ಸಹಚರರಾಗಿದ್ದು, ಅವರನ್ನು ಉಳಿಸಲು ಪ್ರಯತ್ನಿಸುತ್ತಿದೆ. ಆದರೆ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಇಂದು, ಪ್ರಭಾವಿ ವ್ಯಕ್ತಿಗಳಿಗೆ ಮತ್ತು ಸಾಮಾನ್ಯ ಜನರಿಗೆ ಕಾನೂನು ಒಂದೇ ಎಂದು ಪ್ರತಿಪಾದಿಸಿದ ಸಿಎಂ, ನಾಯ್ಡು ಅವರ ಆಪ್ತರಿಗೆ ಈ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

SCROLL FOR NEXT