ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಸಭೆ ಬುಧವಾರ ನಡೆದಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ವಿಪಕ್ಷದ ನಾಯಕರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ಹೇಳಿವೆ.
ನಿವೃತ್ತ ನ್ಯಾಯಾಧೀಶ ಅರುಣ್ ಕುಮಾರ್ ಮಿಶ್ರಾ ಅವರ ಅವಧಿ ಜೂನ್ 1 ರಂದು ಪೂರ್ಣಗೊಂಡಿತ್ತು.ಅಂದಿನಿಂದಲೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆ ತೆರವಾಗಿದೆ.
ಜೂನ್ 2021 ರಂದು ಅತ್ಯುನ್ನತ ಸ್ಥಾನಕ್ಕೆ ನೇಮಕವಾಗಿದ್ದ ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಮಿಶ್ರಾ ಅವರು NHRCಯ 8ನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
NHRC ಆಡಳಿತ ಕಾನೂನು ಪ್ರಕಾರ, ಪ್ರಧಾನಿ ನೇತೃತ್ವದ ಸಮಿತಿ ಅದರ ಅಧ್ಯಕ್ಷರನ್ನು ನೇಮಕ ಮಾಡುತ್ತದೆ. ಸಮಿತಿಯಲ್ಲಿ ಲೋಕಸಭಾ ಸ್ಪೀಕರ್, ಗೃಹ ಸಚಿವರು, ಲೋಕಸಭೆ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕರು ಮತ್ತು ರಾಜ್ಯಸಭೆಯ ಉಪ ಸಭಾಪತಿ ಸದಸ್ಯರಾಗಿರುತ್ತಾರೆ.
ನ್ಯಾಯಮೂರ್ತಿ ಮಿಶ್ರಾ ಅವರ ಅವಧಿ ಮುಗಿದ ನಂತರ NHRC ಸದಸ್ಯರಾಗಿರುವ ವಿಜಯ ಭಾರತಿ ಸಾಯನಿ, ಹಂಗಾಮಿ ಮುಖ್ಯಸ್ಥರಾಗಿದ್ದಾರೆ. ಪ್ರಧಾನಿ ನೇತೃತ್ವದ ಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ದೇಶದ ಮಾಜಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಮೂರ್ತಿಯನ್ನು NHRC ಅಧ್ಯಕ್ಷರಾಗಿ ರಾಷ್ಟ್ರಪತಿಯವರು ನೇಮಕ ಮಾಡುತ್ತಾರೆ. ಈ ಹಿಂದೆ ಮಾಜಿ ಸಿಜೆಐಗಳಾದ ಹೆಚ್ ಎಲ್ ದತ್ತು, ಕೆಜಿ ಬಾಲಕೃಷ್ಣ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.