ಜೈಪುರ: ರಾಜಸ್ಥಾನದ ಜೈಪುರದಲ್ಲಿ ಕಳೆದ ಶುಕ್ರವಾರ ಗ್ಯಾಸ್ ಟ್ಯಾಂಕರ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಬುಧವಾರ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಇತರ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಗಳು ಪೈಕಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್ ಎಂಎಸ್ ಆಸ್ಪತ್ರೆಯ ಅಧೀಕ್ಷಕರಾದ ಸುಶೀಲ್ ಭಾಟಿಯಾ ತಿಳಿಸಿದ್ದಾರೆ.
ಡಿಸೆಂಬರ್ 20 ರಂದು ಜೈಪುರ- ಅಜ್ಮೀರ್ ಹೆದ್ದಾರಿಯಲ್ಲಿ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಹಲವು ವಾಹನಗಳಿಗೆ ಗುದ್ದಿದ್ದ ಪರಿಣಾಮ ಅಗ್ನಿ ಅವಘಡ ಸಂಭವಿಸಿತ್ತು.
ಬಳಿಕ ನೋಡ ನೋಡುತ್ತಿದ್ದಂತೆ ಉಂಟಾದ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯಲ್ಲಿ 30 ಕ್ಕೂ ಅಧಿಕ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.