ದೇಶ

ನನ್ನ ಬಂಧನದಲ್ಲಿ ರಾಜ್ಯಪಾಲರ ಕೈವಾಡ, ಕೇಂದ್ರದಿಂದ ಸಂಚು: ಜಾರ್ಖಂಡ್ ವಿಧಾನಸಭೆಯಲ್ಲಿ ಹೇಮಂತ್ ಸೋರೆನ್

Lingaraj Badiger

ರಾಂಚಿ: ಕೇಂದ್ರ ಸರ್ಕಾರದ ಪಿತೂರಿಯ ನಂತರ ನನ್ನ ಬಂಧನಕ್ಕೆ ರಾಜಭವನ ಪ್ರಮುಖ ಪಾತ್ರ ವಹಿಸಿದೆ ಎಂದು ಬಂಧಿತ ಜೆಎಂಎಂ ನಾಯಕ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಸೋಮವಾರ ಆರೋಪಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಹೇಮಂತ್ ಸೋರೆನ್ ಅವರು, ಚಂಪೈ ಸೋರೆನ್ ಮತ್ತು ಅವರ ಸರ್ಕಾರವನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಹೇಳಿದರು.

"ಜನವರಿ 31ರ ರಾತ್ರಿ ದೇಶದ ಪ್ರಜಾಪ್ರಭುತ್ವಕ್ಕೆ ಕರಾಳ ರಾತ್ರಿ ಮತ್ತು ಒಂದು ಕಪ್ಪು ಚುಕ್ಕೆಯಾಗಿದೆ. ರಾಜಭವನದಲ್ಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು ಎಂದು ನಾನು ಭಾವಿಸುತ್ತೇನೆ. ನನ್ನ ಬಂಧನಕ್ಕೆ ರಾಜಭವನವು ಸಹಕರಿಸಿದೆ ಎಂದು ನಾನು ಭಾವಿಸುತ್ತೇನೆ" ಎಂದು ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೋರೆನ್ ಅವರು ಹೇಳಿದ್ದಾರೆ.

ನನ್ನ ವಿರುದ್ಧದ ಭ್ರಷ್ಟಾಚಾರ ಆರೋಪ ಸಾಬೀತುಪಡಿಸುವಂತೆ ಬಿಜೆಪಿಗೆ ಸವಾಲು ಹಾಕುತ್ತೇನೆ. ಒಂದು ವೇಳೆ ಸಾಬೀತಾದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಹೇಮಂತ್ ಸೋರೆನ್ ಸವಾಲು ಹಾಕಿದರು.

ಕಳೆದ ವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ನಂತರ ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಫೆಬ್ರವರಿ 2 ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಚಂಪೈ ಸೊರೆನ್ ನೇತೃತ್ವದ ಜಾರ್ಖಂಡ್‌ನ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದಿದೆ. 81 ಸದಸ್ಯ ಬಲದ ವಿಧಾನಸಭೆಯಲ್ಲಿ 47 ಶಾಸಕರು ವಿಶ್ವಾಸಮತದ ನಿರ್ಣಯದ ಪರವಾಗಿ ಮತ ಚಲಾಯಿಸಿದರು ಮತ್ತು 29 ಶಾಸಕರು ಅದನ್ನು ವಿರೋಧಿಸಿದರು.

SCROLL FOR NEXT