ಜೈಪುರ: ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಖಮ್ನೋರ್ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ. ಮೇಲ್ಛಾವಣಿ ಕುಸಿದಾಗ ಹದಿಮೂರು ಕಾರ್ಮಿಕರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಹತ್ತು ಮಂದಿ ಅವಶೇಷಗಳಡಿ ಸಿಲುಕಿದ್ದರು ಎಂದು ರಾಜಸಮಂದ್ ಜಿಲ್ಲಾಧಿಕಾರಿ ಭನ್ವರ್ ಲಾಲ್ ಅವರು ಹೇಳಿದ್ದಾರೆ.
ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇತರ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಐವರು ಪ್ರಸ್ತುತ ರಾಜ್ಸಮಂದ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬ ಕಾರ್ಮಿಕನನ್ನು ಉದಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕಲು ಲಾಲ್, ಶಾಂತಿ ಲಾಲ್, ಭಗವತಿ ಲಾಲ್ ಮತ್ತು ಭನ್ವರ್ ಲಾಲ್ ಎಂದು ಗುರುತಿಸಲಾಗಿದೆ.