ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ.
211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ ಸಂಭವಿಸಿತು. ನೂರಾರು ಮನೆಗಳು ಮತ್ತು ಅನೇಕ ಕಡೆಯಲ್ಲಿ ಇಡೀ ಕುಟುಂಬ ಸದಸ್ಯರೇ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಲವಾರು ಮನೆಗಳು ಧ್ವಂಸಗೊಂಡವು, ಜಲಮೂಲಗಳು ತುಂಬಿತುಳುಕುತ್ತಿವೆ. ಮರಗಳು ಬೇರುಸಮೇತ ಬಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು.
ವಯನಾಡ್, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.