ರಾಮನಾಥ್ ಕೋವಿಂದ್ ಸಮಿತಿ 
ದೇಶ

Simultaneous Polls: 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ Kovind ಸಮಿತಿ ವರದಿ ಶೀಘ್ರ ಕೇಂದ್ರ ಸಚಿವ ಸಂಪುಟಕ್ಕೆ ಸಲ್ಲಿಕೆ!

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲು ಕೇಂದ್ರ ಕಾನೂನು ಸಚಿವಾಲಯ ಯೋಜಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲು ಕೇಂದ್ರ ಕಾನೂನು ಸಚಿವಾಲಯ ಯೋಜಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಸರ್ಕಾರಕ್ಕೆ 100 ದಿನಗಳ ಕಾರ್ಯಸೂಚಿಯನ್ನು ರೂಪಿಸುವಂತೆ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಿದ್ದರು. ಅದರಂತೆ "ಶೀಘ್ರದಲ್ಲೇ" ವರದಿಯನ್ನು ಸಂಪುಟದ ಮುಂದೆ ಇಡುವುದು ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆಯ 100 ದಿನಗಳ ಕಾರ್ಯಸೂಚಿಯ ಭಾಗವಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಉನ್ನತ ಮಟ್ಟದ ಸಮಿತಿಯು ಮಾರ್ಚ್ 15 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿಯನ್ನು ಸಲ್ಲಿಸಿತ್ತು. ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಮಿತಿ ಶಿಫಾರಸು ಮಾಡಿತ್ತು. ಅಂತೆಯೇ ಸಮಿತಿಯು ಮಾಡಿದ ಶಿಫಾರಸುಗಳ ಅನುಷ್ಠಾನವನ್ನು ಪರಿಶೀಲಿಸಲು 'ಇಂಪ್ಲಿಮೆಂಟೇಶನ್ ಗ್ರೂಪ್' (ಅನುಷ್ಠಾನ ತಂಡ) ಅನ್ನು ಸ್ಥಾಪಿಸಲು ಸಮಿತಿಯು ತನ್ನ ವರದಿಯಲ್ಲಿ ಪ್ರಸ್ತಾಪಿಸಿದೆ.

ಏಕಕಾಲಿಕ ಚುನಾವಣೆಗಳು ಸಂಪನ್ಮೂಲಗಳನ್ನು ಉಳಿಸಲು ಸಹಾಯ ಮಾಡುತ್ತದೆ, ಅಭಿವೃದ್ಧಿ ಮತ್ತು ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುತ್ತದೆ, "ಪ್ರಜಾಪ್ರಭುತ್ವದ ಅಡಿಪಾಯ" ವನ್ನು ಆಳಗೊಳಿಸುತ್ತದೆ ಮತ್ತು ಅದು ಭಾರತದ ಆಶಯಗಳನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ ಎಂದು ಸಮಿತಿ ಹೇಳಿದೆ.

ರಾಜ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಭಾರತೀಯ ಚುನಾವಣಾ ಆಯೋಗವು ಸಾಮಾನ್ಯ ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಸಿದ್ಧಪಡಿಸುವಂತೆ ಸಮಿತಿಯು ಶಿಫಾರಸು ಮಾಡಿದ್ದು, ಪ್ರಸ್ತುತ, ಇಸಿಐ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಜವಾಬ್ದಾರರಾಗಿದ್ದರೆ, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗಗಳು ನಿರ್ವಹಿಸುತ್ತಿವೆ.

ಸಮಿತಿಯು 18 ಸಾಂವಿಧಾನಿಕ ತಿದ್ದುಪಡಿಗಳನ್ನು ಶಿಫಾರಸು ಮಾಡಿದ್ದು, ಅವುಗಳಲ್ಲಿ ಹೆಚ್ಚಿನವು ರಾಜ್ಯ ಸರ್ಕಾರಗಳ ಅನುಮೋದನೆಯ ಅಗತ್ಯವಿರುವುದಿಲ್ಲ. ಆದಾಗ್ಯೂ, ಇವುಗಳಿಗೆ ಕೆಲವು ಸಂವಿಧಾನ ತಿದ್ದುಪಡಿ ಮಸೂದೆಗಳು ಬೇಕಾಗುತ್ತವೆ. ಅದನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕಾಗುತ್ತದೆ. ಏಕ ಮತದಾರರ ಪಟ್ಟಿ ಮತ್ತು ಏಕ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದಂತೆ ಕೆಲವು ಪ್ರಸ್ತಾವಿತ ಬದಲಾವಣೆಗಳಿಗೆ ಕನಿಷ್ಠ ಅರ್ಧದಷ್ಟು ರಾಜ್ಯಗಳ ಅನುಮೋದನೆಯ ಅಗತ್ಯವಿದೆ. ಪ್ರತ್ಯೇಕವಾಗಿ, ಕಾನೂನು ಆಯೋಗವು ಏಕಕಾಲಿಕ ಚುನಾವಣೆಗಳ ಬಗ್ಗೆ ತನ್ನದೇ ಆದ ವರದಿಯನ್ನು ಶೀಘ್ರದಲ್ಲೇ ಮಂಡಿಸುವ ಸಾಧ್ಯತೆಯಿದೆ.

2029 ರಿಂದ ಪ್ರಾರಂಭವಾಗುವ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಪುರಸಭೆಗಳು ಮತ್ತು ಪಂಚಾಯತ್‌ಗಳಂತಹ ಸ್ಥಳೀಯ ಸಂಸ್ಥೆಗಳ ಎಲ್ಲಾ ಮೂರು ಹಂತದ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಕಾನೂನು ಆಯೋಗವು ಶಿಫಾರಸು ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಂತೆಯೇ ಅತಂತ್ರ ಸ್ಥಿತಿ ಅಥವಾ ಅವಿಶ್ವಾಸ ನಿರ್ಣಯದಂತಹ ಸಂದರ್ಭಗಳಲ್ಲಿ ನಿಬಂಧನೆಗಳನ್ನು ಹೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT