ಸುಪ್ರೀಂ ಕೋರ್ಟ್ TNIE
ದೇಶ

ಸ್ವಾತಂತ್ರ್ಯ ದಿನದಂದು ಪಾಕಿಸ್ತಾನಕ್ಕೆ ಶುಭಾಶಯ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ: ಸುಪ್ರೀಂ ಕೋರ್ಟ್

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಜ್ಞಾನೋದಯ ಮಾಡಿಸುವ ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಜ್ಞಾನೋದಯ ಮಾಡಿಸುವ ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಆರ್ಟಿಕಲ್ 370 ರದ್ದುಗೊಳಿಸಿದ್ದನ್ನು ಟೀಕಿಸಿದ ಪ್ರೊಫೆಸರ್ ವಿರುದ್ಧದ ಕೇಸ್ ಅನ್ನು ರದ್ದುಗೊಳಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ರದ್ದತಿಯನ್ನು ಖಂಡಿಸಿ ವಾಟ್ಸಾಪ್ ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಕೊಲ್ಹಾಪುರದ ಹತ್ಕನಂಗಲೆ ಪೊಲೀಸ್ ಠಾಣೆಯಲ್ಲಿ ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಕೋಮು ಸೌಹಾರ್ದತೆ ಧಕ್ಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಜಾವೇದ್ ಅಹ್ಮದ್ ಹಜಾಮ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ನಂತರ ಹಜಾಮ್ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, "ಈಗ, ಸಂವಿಧಾನದ 19 (1) (ಎ) ಪರಿಚ್ಛೇದದಿಂದ ಖಾತರಿಪಡಿಸಿದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ನಮ್ಮ ಪೊಲೀಸ್ ಯಂತ್ರವನ್ನು ಪ್ರಬುದ್ಧಗೊಳಿಸುವ ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಪೊಲೀಸರು ಸಂವೇದನಾಶೀಲರಾಗಬೇಕು" ಎಂದು ಹೇಳಿದೆ.

"ಭಾರತೀಯರು, ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳುವ ಪಾಕಿಸ್ತಾನದ ನಾಗರಿಕರಿಗೆ ಶುಭಾಶಯ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಮ್ಮ ದೇಶವು 75 ವರ್ಷಗಳಿಗಿಂತಲೂ ಹೆಚ್ಚು ಕಾಲ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದೆ. ನಮ್ಮ ದೇಶದ ಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಮಹತ್ವ ತಿಳಿದಿದೆ. ಆದ್ದರಿಂದ, ಪಾಕಿಸ್ತಾನಕ್ಕೆ ಶುಭ ಕೋರುವುದರಿಂದ ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುತ್ತದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜಾವೇದ್ ಅಹ್ಮದ್ ಹಜಾಮ್ ಅವರು "ಆಗಸ್ಟ್ 5 ಜಮ್ಮು ಮತ್ತು ಕಾಶ್ಮೀರಕ್ಕೆ ಕರಾಳ ದಿನ" ಎಂದು ಮತ್ತು "ಆಗಸ್ಟ್ 14 ರಂದು ಹ್ಯಾಪಿ ಇಂಡಿಪೆಂಡೆನ್ಸ್ ಡೇ ಪಾಕಿಸ್ತಾನ" ಎಂದು ವಾಟ್ಸಾಪ್‌ನಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT