ಎಎನ್ ಐ ಸಂದರ್ಶನದಲ್ಲಿ ಅಮಿತ್ ಶಾ
ಎಎನ್ ಐ ಸಂದರ್ಶನದಲ್ಲಿ ಅಮಿತ್ ಶಾ  
ದೇಶ

CAA ಅನುಷ್ಠಾನ ನಿರಾಕರಿಸುವ ಹಕ್ಕು ಅವರಿಗಿದೆಯೇ: ಮಮತಾ, ಸ್ಟಾಲಿನ್, ವಿಜಯನ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Sumana Upadhyaya

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ(CAA) ಅನುಷ್ಠಾನವನ್ನು ವಿರೋಧಿಸುತ್ತಿರುವ, ತಮ್ಮ ರಾಜ್ಯದಲ್ಲಿ ಅದನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳುತ್ತಿರುವ ಬಿಜೆಪಿಯೇತರ ಆಡಳಿತದ ರಾಜ್ಯಗಳ ಕೆಲವು ಮುಖ್ಯಮಂತ್ರಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ಸಿಎಎ ಸಂವಿಧಾನದ ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸುವುದಿಲ್ಲ ಮತ್ತು ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ ಎಂದು ಗೃಹ ಸಚಿವರು ಪ್ರತಿಪಾದಿಸಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆ ಪ್ರತಿನಿಧಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಮಿತ್ ಶಾ ಅವರು ಸಿಎಎಯನ್ನು ಮೋದಿ ಸರ್ಕಾರ ಜಾರಿಗೆ ತಂದಿದ್ದು ಅದನ್ನು ರದ್ದುಗೊಳಿಸುವುದು ಅಸಾಧ್ಯ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನೀವು ಸಿಎಎ ಅನುಷ್ಠಾನವನ್ನು ನಿರಾಕರಿಸುವ ಹಕ್ಕು ನಿಮಗೆ ಇದೆಯೇ? ಅವರಿಗೆ ಹಕ್ಕುಗಳಿಲ್ಲ ಎಂದು ಅವರು ಅರ್ಥಮಾಡಿಕೊಳ್ಳುತ್ತಾರೆ. ನಮ್ಮ ಸಂವಿಧಾನದಲ್ಲಿ, ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಮಾಡುವ ಹಕ್ಕನ್ನು ಸಂಸತ್ತಿಗೆ ಮಾತ್ರ ನೀಡಲಾಗಿದೆ. ಸಿಎಎಗೆ ಸಂಬಂಧಿಸಿದ ಕಾನೂನು ಮತ್ತು ಅದರ ಅನುಷ್ಠಾನ ಎರಡೂ ಕೇಂದ್ರ ಸರ್ಕಾರದ ವಿಷಯ, ರಾಜ್ಯದ್ದು ಅಲ್ಲ ಎಂದು ಹೇಳಿದ್ದಾರೆ.

ಈಗ ವಿರೋಧಿಸುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ಲೋಕಸಭೆ ಚುನಾವಣೆ ನಂತರ ಒಂದೆಡೆ ಬಂದು ಸಹಕಾರ ನೀಡಲಿವೆ ಎಂದು ಪ್ರತಿಪಾದಿಸಿದರು.

"ನಮ್ಮ ಸಂವಿಧಾನದ 11 ನೇ ವಿಧಿಯು ಸಂಸತ್ತಿಗೆ ಪೌರತ್ವದ ಬಗ್ಗೆ ನಿಯಮಗಳನ್ನು ಮಾಡುವ ಎಲ್ಲಾ ಅಧಿಕಾರಗಳನ್ನು ನೀಡುತ್ತದೆ. ಚುನಾವಣೆಯ ನಂತರ ಎಲ್ಲರೂ ಸಹಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ವಿರೋಧ ಪಕ್ಷಗಳು ತುಷ್ಟೀಕರಣದ ರಾಜಕೀಯಕ್ಕಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ" ಎಂದರು.

ಈ ವಾರದ ಆರಂಭದಲ್ಲಿ ಸಿಎಎ ಅನುಷ್ಠಾನದ ನಿಯಮಗಳನ್ನು ಕೇಂದ್ರವು ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷವಾದ ಡಿಸೆಂಬರ್ 2019 ರಲ್ಲಿ ಈ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಿಎಎ ಕಾನೂನನ್ನು ಕಟುವಾಗಿ ಟೀಕಿಸಿದ್ದಾರೆ. ಅವರು ತಮ್ಮ ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ನಿಯಮಗಳನ್ನು ತಂದಿರುವುದಕ್ಕೆ ಕಾಂಗ್ರೆಸ್ ಸಿಎಎ ಅನುಷ್ಠಾನದ ಸಮಯದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ.

2024 ರಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕರೊಬ್ಬರ ಟೀಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಅಮಿತ್ ಶಾ ಅವರು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಸಿಎಎ ಕುರಿತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮಾಡಿರುವ ಟೀಕೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿಲ್ಲ. 370 ನೇ ವಿಧಿಯ ಬಗ್ಗೆ ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ ಎಂದರು.

ಸಿಎಎ ಅನುಷ್ಠಾನದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಅಮಿತ್ ಶಾ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸವಾಲು ಹಾಕಿದರು. ಸಿಎಎ ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬುದನ್ನು ಸ್ಪಷ್ಟಪಡಿಸಲು ನಾನು ಉದ್ಧವ್ ಠಾಕ್ರೆ ಅವರನ್ನು ಕೇಳಲು ಬಯಸುತ್ತೇನೆ. ಅವರು ಅಲ್ಪಸಂಖ್ಯಾತರ ಮತಗಳನ್ನು ಬಯಸುತ್ತಾರೆ ಮತ್ತು ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ ಎಂದರು.

SCROLL FOR NEXT