ದೇಶ

ಶೋಭಾ, ತೇಜಸ್ವಿ ವಿರುದ್ಧ ಪ್ರಕರಣ, ಮೆಟ್ರೋ ಹಳಿಗೆ ಜಿಗಿದು ವಿದ್ಯಾರ್ಥಿ ಸಾವು: ಈ ದಿನದ ಸುದ್ದಿ ಮುಖ್ಯಾಂಶಗಳು 21-03-2024

Srinivas Rao BV

ಬೆಂಗಳೂರು: ದ್ವೇಷ ಭಾಷಣದ ಆರೋಪದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್ ಪೇಟೆ ಪೊಲೀಸರಿಂದ ಪ್ರಕರಣ ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣವನ್ನು ಚುನಾವಣಾ ಅಧಿಕಾರಿಗಳ ದೂರನ್ನು ಆಧರಿಸಿ ದಾಖಲಿಸಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ತಮಿಳುನಾಡಿನವನು ಎಂಬ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಡಿಎಂಕೆ ಆಗ್ರಹಿಸಿತ್ತು. ಹನುಮಾನ್ ಚಾಲಿಸಾ ಹಾಕಿದ್ದ ಅಂಗಡಿ ಮಾಲಿಕನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ ದ್ವೇಷ ಭಾಷಣ ಮಾಡಿದ್ದರೆಂಬ ಆರೋಪ ಕೇಳಿಬಂದಿದೆ. ಈಮಧ್ಯೆ, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ನ್ಯಾಷನಲ್ ಲಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಧ್ರುವ್ ಮೃತ ವಿದ್ಯಾರ್ಥಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮೆಟ್ರೋ ಪಿಆರ್ ಒ ಯಶವಂತ್ ಚೌಹಾಣ್ ಹೇಳಿದ್ದಾರೆ. ಮೊಬೈಲ್ ನಲ್ಲಿ ಮಾತನಾಡಿಕೊಂಡೆ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 375 ಮಂದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ನವಾಜ್ ಪಾಷಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ಮಾನ್ಯ ಮಾಡಿದ್ದು ಅಕ್ರಮವಾಗಿ ಗುಂಪುಗೂಡಿ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಎನ್ನಲಾದ ಆರೋಪದಡಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಗಳನ್ನು ನ್ಯಾಯಾಲಯವು ರದ್ದುಪಡಿಸಿದೆ. ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ, ಪೊಲೀಸರು ಯಾವುದೇ ವಸ್ತು ವಶಪಡಿಸಿಕೊಂಡಿಲ್ಲ ಎಂದು ಆದೇಶದಲ್ಲಿ ಹೇಳಿದೆ.

ಹೆರಿಗೆ ವೇಳೆ ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದ ಶಾರದಾ ದೊಡ್ಡಮನಿ ಅವರು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ನಂತರ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಶಾರದಾ ದೊಡ್ಡಮನಿ ಅವರಿಗೆ ಬೇರೆ ಗುಂಪಿನ ರಕ್ತ ನೀಡಿದ್ದರಿಂದ ಆಕೆ ಸಾವನ್ನಪ್ಪಿದ್ದರು.

ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ತಮ್ಮ ಮನದಾಳದ ಮಾತನ್ನು ಹಂಚಿಕೊಳ್ಳಲು ಸುದ್ದಿಗೋಷ್ಠಿ ನಡೆಸಿದ ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಕಾಂಗ್ರೆಸ್'ನಿಂದ ಆಹ್ವಾನ ಬಂದಿದ್ದು ನಿಜ, ಆದರೆ ನಾನು, ಕಾಂಗ್ರೆಸ್‌ ಸೇರಲ್ಲ BJP ಶುದ್ಧೀಕರಣ ನನ್ನ ಗುರಿ ಎಂದು ಹೇಳಿದ್ದಾರೆ. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಎಂದು ಸದಾನಂದ ಗೌಡ ಹೇಳಿದ್ದಾರೆ. ಈಮಧ್ಯೆ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಸ್ವಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬಚ್ಚೇಗೌಡ ಪತ್ರದಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ವಿರುದ್ಧವೂ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

SCROLL FOR NEXT