ಧುಲೆ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಆದಿವಾಸಿಗಳನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಧುಲೆ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ಚುನಾವಣಾ ಭಾಷಣಾ ಮಾಡಿದ ಖರ್ಗೆ, ಸ್ವಾತಂತ್ರಕ್ಕೂ ಮುನ್ನಾ ದೇಶದಲ್ಲಿ ಬಡವರು, ದಲಿತರು ಮತ್ತು ಬುಡಕಟ್ಟು ಸಮುದಾಯದ ಜನರನ್ನು ಗುಲಾಮರಂತೆ ನಡೆಸಿಕೊಳ್ಳಲಾಗುತಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಅಧಿಕಾರಕ್ಕೆ ಬಂದರೆ ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಮತದಾರರು ನಿಮ್ಮ ಸ್ವಂತಕ್ಕಾಗಿ, ನಿಮ್ಮ ಜನರಿಗಾಗಿ ಮತ ಚಲಾಯಿಸಬೇಕು. ಸಂವಿಧಾನವನ್ನು ಉಳಿಸಬೇಕಾಗಿದೆ. ಚುನಾವಣೆ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಹೀಗಾಗಿ ಇದೊಂದು ಮಹತ್ವದ ಚುನಾವಣೆಯಾಗಿದೆ ಎಂದರು.
ಸಂವಿಧಾನ ಇಲ್ಲದಿದ್ದರೆ, ನಿಮ್ಮನ್ನು ಉಳಿಸಲು ಯಾರೂ ಇರುವುದಿಲ್ಲ. "ಸಂವಿಧಾನವನ್ನು ಬದಲಾಯಿಸಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ 2015 ರಲ್ಲಿ ಹೇಳಿದ್ದರು. ನಂತರ ಹಲವು ಬಿಜೆಪಿ ಸಂಸದರು ಮತ್ತು ನಾಯಕರು ಕೂಡ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರುವ ಬಗ್ಗೆ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.