ನವದೆಹಲಿ: ಕಳೆದ ಗುರುವಾರ ಲೋಕಸಭೆಯಲ್ಲಿ ಪಾಸ್ ಆಗಿದ್ದ ವಲಸೆ ಮತ್ತು ವಿದೇಶಿಯರ ಮಸೂದೆ 2025 ಅನ್ನು ಬುಧವಾರ ರಾಜ್ಯಸಭೆಯಲ್ಲೂ ಅಂಗೀಕರಿಸಲಾಗಿದೆ.
ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಡಿಸಿದ್ದ ವಲಸೆ ಮತ್ತು ವಿದೇಶಿಯರ ಮಸೂದೆಯನ್ನು ಇಂದು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ನಿತ್ಯಾನಂದ ರೈ, ಪಶ್ಚಿಮ ಬಂಗಾಳದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಟಿಎಂಸಿ ಸರ್ಕಾರವ, ಅಕ್ರಮ ವಲಸಿಗರಿಗೆ ದೇಶ ಪ್ರವೇಶಿಸಲು 'ಸಹಾಯ' ಮಾಡಿದ್ದಾರೆ. ಮತದಾರರ ಪಟ್ಟಿ ಮತ್ತು ಪಡಿತರ ಚೀಟಿಗಳಲ್ಲಿ ಅವರ ಹೆಸರುಗಳನ್ನು ಸೇರಿಸುವ ಮೂಲಕ ದೇಶದಲ್ಲಿ ಅಕ್ರಮ ವಾಸ್ತವ್ಯಕ್ಕೆ ಅವಕಾಶ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದಕ್ಕೆ ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರೊಂದಿಗೆ ಸಭಾತ್ಯಾಗ ಮಾಡಿದರು.
ದೇಶದ ಭದ್ರತೆ ಮತ್ತು ಆರ್ಥಿಕತೆಯನ್ನು ಬಲಪಡಿಸಲು, ಉತ್ಪಾದನೆ ಮತ್ತು ವ್ಯಾಪಾರವನ್ನು ಉತ್ತೇಜಿಸಲು, ಶಿಕ್ಷಣ ವ್ಯವಸ್ಥೆಗೆ ಜಾಗತಿಕ ಮನ್ನಣೆ ಪಡೆಯಲು ಮತ್ತು ವಿಶ್ವವಿದ್ಯಾಲಯಗಳು ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಲು ಈ ಮಸೂದೆ ಅಗತ್ಯವಾಗಿದೆ ಎಂದು ರೈ ಹೇಳಿದರು.
ಕಳೆದ ಮಾರ್ಚ್ 27 ರಂದು ಲೋಕಸಭೆಯಲ್ಲಿ ಅಮಿತ್ ಶಾ ಅವರು ಮಂಡಿಸಿದ ವಲಸೆ ಮತ್ತು ವಿದೇಶಿಯರ ಮಸೂದೆಯನ್ನು ವಾದ-ವಿವಾದಗಳ ಮಧ್ಯೆ ವಿರೋಧ ಪಕ್ಷದ ಸದಸ್ಯರು ಸೂಚಿಸಿದ ತಿದ್ದುಪಡಿಗಳನ್ನು ತಿರಸ್ಕರಿಸಿ, ಧ್ವನಿ ಮತದ ಮೂಲಕ ಅಂಗೀಕರಿಸಲಾಗಿತ್ತು.