ಅಸಾದುದ್ದೀನ್ ಓವೈಸಿ online desk
ದೇಶ

ಪಾಕಿಸ್ತಾನಕ್ಕೆ ಸ್ಥಗಿತಗೊಳಿಸಿದ್ದರಿಂದ ಬರುವ ಹೆಚ್ಚುವರಿ ನೀರನ್ನು ನಾವೆಲ್ಲಿ ಹಿಡಿದಿಟ್ಟುಕೊಳ್ಳೋದು?: ಓವೈಸಿ ಪ್ರಶ್ನೆ

ನವದೆಹಲಿಯಲ್ಲಿ ಕೇಂದ್ರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ಭದ್ರತೆಯ ಕುರಿತಾದ ಸಂಪುಟ ಸಮಿತಿ ತೆಗೆದುಕೊಂಡ ನಿರ್ಧಾರಗಳನ್ನು ಸ್ವಾಗತಿಸಿದರು.

ಹೈದರಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಬಲವಾದ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ ಮತ್ತು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಸರ್ಕಾರದ ಕ್ರಮವನ್ನು ಬೆಂಬಲಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ಭದ್ರತೆಯ ಕುರಿತಾದ ಸಂಪುಟ ಸಮಿತಿ ತೆಗೆದುಕೊಂಡ ನಿರ್ಧಾರಗಳನ್ನು ಸ್ವಾಗತಿಸಿದರು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯಬಾರದು ಎಂದು ಹೇಳಿದ್ದಾರೆ.

1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಓವೈಸಿ, ಈ ದಿಟ್ಟ ಕ್ರಮವನ್ನು ಸ್ವಾಗತಿಸಿದರು, ಆದರೆ ಸರ್ಕಾರ ನೀರನ್ನು ಎಲ್ಲಿ ಸಂಗ್ರಹಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

"ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವುದು ತುಂಬಾ ಒಳ್ಳೆಯದು, ಆದರೆ ನಾವು ನೀರನ್ನು ಎಲ್ಲಿ ಸಂಗ್ರಹಿಸುತ್ತೀರಿ? ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಇದು ರಾಜಕೀಯ ವಿಷಯವಲ್ಲ" ಎಂದು ಓವೈಸಿ ಹೇಳಿದ್ದಾರೆ.

ಪಹಲ್ಗಾಮ್ ದಾಳಿಗೆ ಬಲವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಅಂತರರಾಷ್ಟ್ರೀಯ ಕಾನೂನು ಭಾರತಕ್ಕೆ ನೀಡಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. "ಭಯೋತ್ಪಾದಕ ಗುಂಪುಗಳಿಗೆ ಆಶ್ರಯ ನೀಡುವ ರಾಷ್ಟ್ರದ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬಹುದು. ಪಾಕಿಸ್ತಾನದ ವಿರುದ್ಧ ಆತ್ಮರಕ್ಷಣೆಗಾಗಿ ವಾಯು ಮತ್ತು ನೌಕಾ ದಿಗ್ಬಂಧನ ವಿಧಿಸಲು ಮತ್ತು ಅವರಿಗೆ ಶಸ್ತ್ರಾಸ್ತ್ರ ಮಾರಾಟದ ಮೇಲೆ ನಿರ್ಬಂಧಗಳನ್ನು ವಿಧಿಸಲು ಅಂತರರಾಷ್ಟ್ರೀಯ ಕಾನೂನು ನಮಗೆ ಅವಕಾಶ ನೀಡುತ್ತದೆ" ಎಂದು ಅವರು ಹೇಳಿದರು.

ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ದಾಳಿಯ ಸಮಯದಲ್ಲಿ ಭದ್ರತಾ ಪ್ರತಿಕ್ರಿಯೆಯಲ್ಲಿನ ವಿಳಂಬದ ಬಗ್ಗೆಯೂ ಓವೈಸಿ ಪ್ರಶ್ನೆಗಳನ್ನು ಎತ್ತಿದರು. "ಬೈಸರನ್ ಹುಲ್ಲುಗಾವಲಿನಲ್ಲಿ ಸಿಆರ್‌ಪಿಎಫ್ ನ್ನು ಏಕೆ ನಿಯೋಜಿಸಲಾಗಿಲ್ಲ? ತ್ವರಿತ ಪ್ರತಿಕ್ರಿಯೆ ತಂಡ ಅಲ್ಲಿಗೆ ತಲುಪಲು ಒಂದು ಗಂಟೆ ಏಕೆ ತೆಗೆದುಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಮೂಲಗಳ ಪ್ರಕಾರ, ಸರ್ವಪಕ್ಷ ಸಭೆಯ ಸಮಯದಲ್ಲಿ ಸರ್ಕಾರ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪಗಳನ್ನು ಒಪ್ಪಿಕೊಂಡಿದೆ.

"ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ನಾವು ಕಂಡುಹಿಡಿಯಬೇಕಾದ ಲೋಪಗಳು ನಡೆದಿವೆ" ಎಂದು ಆಡಳಿತ ಪಕ್ಷದ ನಾಯಕರೊಬ್ಬರು ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದರು ಎಂದು ವರದಿಯಾಗಿದೆ.

ಕಾಶ್ಮೀರಿಗಳು ಮತ್ತು ಕಣಿವೆಯ ವಿದ್ಯಾರ್ಥಿಗಳ ವಿರುದ್ಧ "ಸುಳ್ಳು ಪ್ರಚಾರ"ವನ್ನು ನಿಲ್ಲಿಸುವಂತೆ ಇದೆ ವೇಳೆ ಓವೈಸಿ ಸಭೆಯಲ್ಲಿ ಮನವಿ ಮಾಡಿದರು. ಆದರೂ ಅವರು ಭಯೋತ್ಪಾದಕರನ್ನು ಬಲವಾಗಿ ಖಂಡಿಸಿದರು. "ಭಯೋತ್ಪಾದಕರು ಜನರನ್ನು ಅವರ ಧರ್ಮದ ಬಗ್ಗೆ ಕೇಳಿ ಕೊಂದ ರೀತಿಯನ್ನು ನಾನು ಖಂಡಿಸುತ್ತೇನೆ" ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಹತ್ಯಾಕಾಂಡದ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಪಹಲ್ಗಾಮ್ ದಾಳಿಯನ್ನು ಉರಿ ಮತ್ತು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗಿಂತ ಅಪಾಯಕಾರಿ ಮತ್ತು ನೋವಿನಿಂದ ಕೂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದಾಳಿಯನ್ನು ಪ್ರಮುಖ ಗುಪ್ತಚರ ವೈಫಲ್ಯ ಎಂದು ಕರೆದಿದ್ದಾರೆ ಮತ್ತು ಸರ್ಕಾರ ಭಯೋತ್ಪಾದನೆಯನ್ನು ತಡೆಗಟ್ಟುವ ತನ್ನ ತಂತ್ರವನ್ನು ಮರುಮೌಲ್ಯಮಾಪನ ಮಾಡಬೇಕು ಎಂದು ಹೇಳಿದರು. "ಇದು ಗುಪ್ತಚರ ವೈಫಲ್ಯವೂ ಆಗಿದೆ. ಸರ್ಕಾರ ಈ ಭಯೋತ್ಪಾದಕರಿಗೆ ಪಾಠ ಕಲಿಸುತ್ತದೆ ಮತ್ತು ಬಲಿಪಶುಗಳ ಕುಟುಂಬಗಳಿಗೆ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ಅವರು ಹೇಳಿದ್ದರು.

ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಕಿರಣ್ ರಿಜಿಜು ಮತ್ತು ಎಸ್. ಜೈಶಂಕರ್ ಸೇರಿದಂತೆ ಉನ್ನತ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿನಿಂದ ನಿಲ್ಲುವ ಬಗ್ಗೆ ಒಮ್ಮತದೊಂದಿಗೆ ಸಭೆ ಕೊನೆಗೊಂಡಿತು.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್, ಬೈಸರನ್ ಹುಲ್ಲುಗಾವಲುಗಳಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT