ನವದೆಹಲಿ: ಮಹಾರಾಷ್ಟ್ರದ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ನೇಮಕ ಮಾಡಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ವಿಜಯ್ ನಾಮದೇವರಾವ್ ವಡೆತ್ತಿವಾರ್ ಅವರ ನೇಮಕಕ್ಕೂ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ.
ಮಹಾರಾಷ್ಟ್ರದ ಬುಲ್ಧಾನ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸಪ್ಕಲ್ 2014 ರಿಂದ 2019 ರವರೆಗೆ ಶಾಸಕರಾಗಿದ್ದರು. ತಕ್ಷಣದಿಂದ ಜಾರಿಗೆ ಬರುವಂತೆ ಹರ್ಷವರ್ಧನ್ ಸಪ್ಕಲ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಅಧ್ಯಕ್ಷರು ನೇಮಿಸಿದ್ದಾರೆ.
ನಿರ್ಗಮಿತ ಅಧ್ಯಕ್ಷ ನಾನಾ ಪಟೋಲೆ ಅವರ ಕೊಡುಗೆಯನ್ನು ಪಕ್ಷ ಶ್ಲಾಘಿಸುತ್ತದೆ ಎಂದು ಎಐಸಿಸಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ತನ್ನ ಸರ್ಕಾರವನ್ನು ರಚಿಸಲು ವಿಫಲವಾದ ನಂತರ ಮತ್ತು NDAಯ ಮಹಾಯುತಿ ಮೈತ್ರಿಕೂಟದ ಎದುರು ಹೀನಾಯವಾಗಿ ಸೋತ ನಂತರ ನಾನಾ ಪಟೋಲೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.