ಪಾಟ್ನಾ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ 'ಮಹಾಕುಂಭ ಮೇಳ' ಕುರಿತು RJD ವರಿಷ್ಠ ಲಾಲು ಪ್ರಸಾದ್ ಯಾದವ್ ನೀಡಿರುವ ಹೇಳಿಕೆ ವಿವಾದ ಹುಟ್ಟುಹಾಕಿದೆ.
ಮಹಾ ಕುಂಭ 'ಅರ್ಥ ಹೀನ' ಎಂಬ ಅವರ ಹೇಳಿಕೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ.
ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ ಘಟನೆಗೆ ರೈಲ್ವೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ದೂಷಿಸಿದ ಲಾಲು, ರೈಲ್ವೆ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಕಾಲ್ತುಳಿತ ಘಟನೆ ತುಂಬಾ ದು:ಖಕರ ಸಂಗತಿಯಾಗಿದೆ. ಇದು ಕೇಂದ್ರ ಸರ್ಕಾರದ ಅಸಮರ್ಪಕ ವ್ಯವಸ್ಥೆಗಳನ್ನು ಬಹಿರಂಗಪಡಿಸಿದೆ. ಇದರಲ್ಲಿ ರೈಲ್ವೆಯ ಸಂಪೂರ್ಣ ವಿಫಲತೆ ಎದ್ದು ಕಾಣುತ್ತಿದ್ದು, ರೈಲ್ವೆ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಜನನಿಬಿಡ ರೈಲು ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬಿಹಾರದ ಜನರು ಮತ್ತು ಗಾಯಗೊಂಡವರ ನಿಖರ ಸಂಖ್ಯೆಯ ವಿವರಗಳನ್ನು ನಿರೀಕ್ಷಿಸಲಾಗಿದೆ.
ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಜನರು ಪ್ರಯಾಗ್ ರಾಜ್ ಗೆ ಹೋಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಾಲು ಪ್ರಸಾದ್ ಯಾದವ್, ಕುಂಭಕ್ಕೆ ಯಾವುದೇ ಅರ್ಥವಿಲ್ಲ. ಅದು ಅರ್ಥಹೀನವಾಗಿದೆ ಎಂದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಹಾರ ಬಿಜೆಪಿ ವಕ್ತಾರ ಮನೋಜ್ ಶರ್ಮಾ, ಇದು ಹಿಂದೂ ಧರ್ಮದ ಬಗ್ಗೆ ಆರ್ಜೆಡಿಯ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ತುಷ್ಟೀಕರಣದ ರಾಜಕಾರಣದಿಂದಾಗಿ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆರ್ಜೆಡಿ ನಾಯಕರು ಯಾವಾಗಲೂ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ. ಮಹಾಕುಂಭವನ್ನು ಅರ್ಥಹೀನ ಎಂದು ಕರೆದ ಲಾಲು ಪ್ರಸಾದ್ ಅವರ ಹೇಳಿಕೆಯು ಹಿಂದೂ ಧರ್ಮದ ಬಗ್ಗೆ ಪಕ್ಷದ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದು ಶರ್ಮಾ ಹೇಳಿದ್ದಾರೆ.