ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯ ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಬಲಂಗಾ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಕೆಯನ್ನು ಭುವನೇಶ್ವರದ ಏಮ್ಸ್'ಗೆ ದಾಖಲಿಸಲಾಗಿದೆ.
ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.
ಬಾಲಕಿಗೆ ಬೆಂಕಿ ಹಚ್ಚಿದ ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಆಕೆಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾಲೆ. ನಂತರ ಏಮ್ಸ್'ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಘಟನೆ ಕುರಿತು ಎಸ್ಪಿ ಪ್ರಭಾರಿ ಪಿನಾಕ್ ಮಿಶ್ರಾ ಅವರು ಪ್ರತಿಕ್ರಿಯೆ ನೀಡಿದ್ದು, ಘಟನೆ ಸಂಬಂಧ ಯಾವುದೇ ದೂರುಗಳು ಬಂದಿಲ್ಲ. ಗ್ರಾಮಸ್ಥರು ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ. ಇನ್ನು ಬಾಲಕಿಯ ಕುಟುಂಬದ ಆಕೆಗೆ ಯಾರೊಂದಿಗೂ ವೈಯಕ್ತಿಕ ದ್ವೇಷವಿಲ್ಲ ಎಂದು ಹೇಳಿದೆ, ಪ್ರಸ್ತುತ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಘಟನೆಗೆ ಉಪ ಮುಖ್ಯಮಂತ್ರಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಪ್ರವತಿ ಪರಿದಾ ಅವರು ಆಘಾತ ವ್ಯಕ್ತಪಡಿಸಿದ್ದು, ಸಂತ್ರಸ್ತೆಯನ್ನು ತಕ್ಷಣವೇ ಭುವನೇಶ್ವರದ ಏಮ್ಸ್ಗೆ ಸ್ಥಳಾಂತರಿಸಲಾಗಿದ್ದು, ಅತ್ಯುತ್ತಮ ಚಿಕಿತ್ಸೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಆಕೆಯ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಅಪರಾಧಿಗಳ ತಕ್ಷಣವೇ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.