ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್ ಧಂಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ದೊರೆತ ಅಚಲವಾದ ಬೆಂಬಲ ಮತ್ತು ಹಿತವಾದ ಅದ್ಬುತ ಕಾರ್ಯ ಸಂಬಂಧಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾಗಿದ್ದು, ಅಧಿಕಾರಾವಧಿಯಲ್ಲಿ ಸಾಕಷ್ಟು ಕಲಿತಿರುವುದಾಗಿ ಅವರು ತಿಳಿಸಿದ್ದಾರೆ.
ಸಂಸತ್ತಿನ ಎಲ್ಲಾ ಸದಸ್ಯರಿಂದ ದೊರೆತ ಪ್ರೀತಿ, ವಿಶ್ವಾಸ ಮತ್ತು ಪ್ರೀತಿಯನ್ನು ಎಂದಿಗೂ ಮರೆಯಲ್ಲ. ನಮ್ಮ ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪ ರಾಷ್ಟ್ರಪತಿಯಾಗಿ ಅಪಾರ ಅನುಭವ ಗಳಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.
ಭಾರತದ ಪ್ರಗತಿ ಮತ್ತು ಭವಿಷ್ಯದ ಬಗ್ಗೆ ಅವರಿಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಹ ತಮ್ಮ ಪತ್ರದ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.