ಅಹಮದಾಬಾದ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ  
ದೇಶ

ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ: ಅಹಮದಾಬಾದ್ ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ

ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.

ಅಹಮದಾಬಾದ್‌ನಲ್ಲಿ 265 ಜನರು ಪ್ರಾಣ ಕಳೆದುಕೊಂಡ ಏರ್ ಇಂಡಿಯಾ AI 171 ವಿಮಾನ ಅಪಘಾತದ ಸ್ಥಳಕ್ಕೆ ಇಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಇಲ್ಲಿನ ನಾಗರಿಕ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ಮೋದಿ, ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ. ಇಷ್ಟೊಂದು ಹಠಾತ್ ಮತ್ತು ಹೃದಯವಿದ್ರಾವಕ ರೀತಿಯಲ್ಲಿ ಹಲವಾರು ಜೀವಗಳನ್ನು ಕಳೆದುಕೊಂಡಿರುವುದು ಪದಗಳಿಗೆ ನಿಲುಕದಷ್ಟು ದೊಡ್ಡ ದುರಂತ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು" ಎಂದು ಬರೆದುಕೊಂಡಿದ್ದಾರೆ.

ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.

ನಿನ್ನೆ ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಮೇಘನಿನಗರ ಪ್ರದೇಶದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ (AI171) ಅಪ್ಪಳಿಸಿದ ಸ್ಥಳವನ್ನು ಇಂದು ಪ್ರಧಾನಿ ಸುಮಾರು 20 ನಿಮಿಷಗಳ ಕಾಲ ಪರಿಶೀಲಿಸಿದರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಅವರು ವಿಮಾನ ಕಾಲೇಜು ಹಾಸ್ಟೆಲ್ ಹೇಗೆ ಅಪ್ಪಳಿಸಿತು ಎಂಬುದರ ಬಗ್ಗೆ ಮೋದಿಗೆ ವಿವರಿಸಿದರು.

ನಂತರ ಪ್ರಧಾನಿಯವರು ನಗರದ ಸಿವಿಲ್ ಆಸ್ಪತ್ರೆಗೆ ತೆರಳಿ ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಒಂದು ದಿನದ ಹಿಂದೆ ನಡೆದ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಶ್‌ಕುಮಾರ್ ರಮೇಶ್ ಅವರನ್ನು ಭೇಟಿಯಾದರು.

25 ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಸಿ7 ವಾರ್ಡ್‌ಗೆ ಅವರು ಭೇಟಿ ನೀಡಿ ವೈದ್ಯರೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರು ಆಸ್ಪತ್ರೆಯಲ್ಲಿ ಸುಮಾರು 10 ನಿಮಿಷಗಳ ಕಾಲ ಕಳೆದರು.

ಮೋದಿ ಅವರು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಗುಜ್‌ಸೈಲ್ ಕಚೇರಿಯಲ್ಲಿ ರಾಜ್ಯ ಮತ್ತು ನಾಗರಿಕ ವಿಮಾನಯಾನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸ್ವಚ್ಛಗೊಳಿಸುವ ಕಾರ್ಯ

ಅಪಘಾತದ ಸ್ಥಳವನ್ನು ತೆರವುಗೊಳಿಸುವ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಕೊನೆಯ ಹಂತದಲ್ಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಉಪ ಆಯುಕ್ತ ಕಾನನ್ ದೇಸಾಯಿ ಅವರು ಸ್ಥಳವನ್ನು ತೆರವುಗೊಳಿಸುವ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಕೆಲವು ಅವಶೇಷಗಳನ್ನು ಇನ್ನೂ ತೆಗೆದುಹಾಕಬೇಕಾಗಿದೆ ಎಂದು ಹೇಳಿದರು. ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಎಂದು ಅವರು ಹೇಳಿದರು.

ಇನ್ನೂ ಪತ್ತೆಯಾಗದ ವಿಮಾನ ಕಪ್ಪು ಪೆಟ್ಟಿಗೆ

265 ಶವಗಳನ್ನು ಸಿಟಿ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಕಾನನ್ ದೇಸಾಯಿ ಈ ಹಿಂದೆ ಹೇಳಿದ್ದರು. ಏರ್ ಇಂಡಿಯಾ ವಿಮಾನದ ಕಪ್ಪು ಪೆಟ್ಟಿಗೆಯನ್ನು ಇನ್ನೂ ಪತ್ತೆ ಮಾಡಿಲ್ಲ, ತನಿಖಾಧಿಕಾರಿಗಳು ವಿಮಾನ ಮತ್ತು ಕಾಕ್‌ಪಿಟ್ ರೆಕಾರ್ಡರ್‌ಗಳು ಕಾರಣವನ್ನು ಅರ್ಥಮಾಡಿಕೊಳ್ಳುವಲ್ಲಿ ಪ್ರಮುಖವಾಗಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT