90 ಡಿಗ್ರಿ ತಿರುವಿನ ಮೇಲ್ಸೇತುವೆ 
ದೇಶ

'90 ಡಿಗ್ರಿ ಸಾವು': ಹೊಸ ವಿನ್ಯಾಸದ ಮೇಲ್ಸೇತುವೆ, ಸಾರ್ವಜನಿಕರ ಕಿಡಿ.. ಅಧಿಕಾರಿಗಳ ಸಮರ್ಥನೆ! Video

ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆ (Railway overbridge) ವಿವಾದಕ್ಕೆ ಕಾರಣವಾಗಿದ್ದು, ಉದ್ಘಾಟನೆಗೂ ಮುಂಚೆಯೇ ಈ ಸೇತುವೆಯ ವಿನ್ಯಾಸದ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ.

ಭೋಪಾಲ್: ಹೊಸದಾಗಿ ನಿರ್ಮಿಸಲಾದ ಮೇಲ್ಸೇತುವೆಯೊಂದು ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, 90 ಡಿಗ್ರಿ ತಿರುವು ಇರುವ ಈ ಮೇಲ್ಸೇತುವೆ ವಿರುದ್ಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೌದು.. ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆ (Railway overbridge) ವಿವಾದಕ್ಕೆ ಕಾರಣವಾಗಿದ್ದು, ಉದ್ಘಾಟನೆಗೂ ಮುಂಚೆಯೇ ಈ ಸೇತುವೆಯ ವಿನ್ಯಾಸದ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ಸದ್ಯ ಈ ಮೇಲ್ಸೇತುವೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಇದರ ಇಂಜಿನಿಯರ್‌ ಯಾರು? ಎಂದು ಜನ ಕಿಡಿಕಾರುತ್ತಿದ್ದಾರೆ.

ಭೋಪಾಲ್ ನ ಐಶ್‌ಬಾಗ್ ರೈಲ್ವೆ ಕ್ರಾಸಿಂಗ್‌ನಲ್ಲಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಮೇಲ್ಸೇತುವೆಯನ್ನು ನಿರ್ಮಿಸಲಾಗಿದೆ.ಮಾರ್ಚ್ 2023ರಲ್ಲಿ ಸೇತುವೆ ನಿರ್ಮಾಣ ಪ್ರಾರಂಭವಾಯಿತು. ಈ ಸೇತುವೆಯಿಂದ ಪ್ರಯಾಣದ ಸಮಯ ಕಡಿಮೆಯಾಗುತ್ತದೆ ಮತ್ತು ಟ್ರಾಫಿಕ್ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಿರೀಕ್ಷಿಸಲಾಗಿದೆ.

ರೈಲ್ವೆ ಮೇಲ್ಸೇತುವೆಯು ಮಹಾಮಾಯಿ ಕಾ ಬಾಗ್, ಪುಷ್ಪಾ ನಗರ, ರೈಲ್ವೆ ನಿಲ್ದಾಣ ಪ್ರದೇಶ ಮತ್ತು ನ್ಯೂ ಭೋಪಾಲ್ ನಡುವೆ ಸಂಪರ್ಕ ಕಲ್ಪಿಸುತ್ತದೆ. ಈ ಸೇತುವೆಯಿಂದ ಪ್ರತಿದಿನ ಸುಮಾರು ಮೂರು ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ.

ವಿವಾದ ಏಕೆ?

ಸೇತುವೆಯ ವಿನ್ಯಾಸದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಸೇತುವೆಯ ನಿರ್ಮಾಣದಲ್ಲಿ ವಿನ್ಯಾಸ ದೋಷವಿದ್ದು, 90 ಡಿಗ್ರಿ ತಿರುವು ಇರುವುದು ವಾಹನ ಚಾಲಕರಿಗೆ ಅಸುರಕ್ಷಿತ ಆಗಿರಲಿದೆ ಎಂಬುದು ತಜ್ಞರ ವಾದ.

ಅಂದಹಾಗೆ ಸುಮಾರು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 648 ಮೀಟರ್ ಉದ್ದ ಮತ್ತು 8.5 ಮೀಟರ್ ಅಗಲದ ಈ ಸೇತುವೆಯಲ್ಲಿ, ನೇರವಾಗಿ 90 ಡಿಗ್ರಿ ತಿರುವು ಹೊಂದಿದೆ. ಇದು ವಾಹನ ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ ಎಂಬುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸೇತುವೆಯ ಒಂದು ತುದಿಯಲ್ಲಿರುವ 90 ಡಿಗ್ರಿ ತಿರುವು ಅಪಾಯಕಾರಿಯಾಗಿದೆ ಎಂದು ಜನರು ಹೇಳುತ್ತಿದ್ದಾರೆ.

ವ್ಯಾಪಕ ಆಕ್ರೋಶ

‘ಭೋಪಾಲ್‌ನ ಐಶ್‌ಬಾಗ್ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು PWD ಇಲಾಖೆ ಬರೋಬ್ಬರಿ 10 ವರ್ಷಗಳನ್ನು ತೆಗೆದುಕೊಂಡಿದೆ. ಭ್ರಷ್ಟ ಸರ್ಕಾರಗಳ ಕೈಯಲ್ಲಿ ಅಧಿಕಾರವಿದ್ದಾಗ, ಪುಸ್ತಕಗಳಿಗೆ ಸೀಮಿತವಾದ ಅಸಮರ್ಥ ಇಂಜಿನಿಯರ್‌ಗಳ ಯೋಜನೆಗಳನ್ನು ರೂಪಿಸಿದಾಗ ಮತ್ತು ಮೆರಿಟ್‌ ಇಲ್ಲದೆ ಹಣ ಕೊಟ್ಟು ಪದವಿ ಪಡೆದುಕೊಂಡ ಇಂಜಿನಿಯರ್‌ಗಳಿಂದ ದುರಂತಗಳು ಸಾಧ್ಯ. ಸೇತುವೆಯ 90 ಡಿಗ್ರಿ ತಿರುವು ಅಪಘಾತಗಳಿಗೆ ಆಹ್ವಾನ ನೀಡುತ್ತದೆ,ʼ ಎಂದು ಎಕ್ಸ್‌ನಲ್ಲಿ ಮನೀಶ್ ಚೌಧರಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತೆಯೇ ‘ಸೇತುವೆಗಾಗಿ 18 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಸೇತುವೆಯಲ್ಲಿ ಸಾವು 90 ಡಿಗ್ರಿ ಕೋನದಲ್ಲಿ ಬರುತ್ತದೆ. ಇದು ಮಧ್ಯಪ್ರದೇಶದ ರಾಜಧಾನಿಯಲ್ಲಿ ಉದ್ಭವಿಸಿರುವ ಅಭಿವೃದ್ಧಿಯ ಕೋನʼ ಎಂದು ಎಕ್ಸ್‌ ಬಳಕೆದಾರ ಮುಖೇಶ್ ಬರೆದುಕೊಂಡಿದ್ದಾರೆ.

ಅಧಿಕಾರಿಗಳ ಸಮರ್ಥನೆ

ನಿರಂತರ ಟೀಕೆಗಳ ಹೊರತಾಗಿ ಈ ಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳು ಸೇತುವೆಯ ವಿನ್ಯಾಸವನ್ನು ಸಮರ್ಥಿಸಿಕೊಂಡಿದ್ದಾರೆ. ‘ಸ್ಥಳದ ಕೊರತೆಯಿಂದಾಗಿ ಈ ರೀತಿ ವಿನ್ಯಾಸ ಮಾಡಲಾಗಿದೆʼ ಎಂದು ಹೇಳಿಕೊಂಡಿದ್ದಾರೆ. ಸಾರ್ವಜನಿಕ ಕಾಮಗಾರಿ ಇಲಾಖೆಯ (ಸೇತುವೆ ವಿಭಾಗ) ಮುಖ್ಯ ಇಂಜಿನಿಯರ್ ವಿ.ಡಿ. ವರ್ಮಾ ನೀಡಿದ ಹೇಳಿಕೆಯಲ್ಲಿ, ‘ಮೆಟ್ರೋ ನಿಲ್ದಾಣ ಇರುವುದರಿಂದ, ಆ ಜಾಗದಲ್ಲಿ ಜಾಗದ ಲಭ್ಯತೆ ಕಡಿಮೆ ಇದೆ. ಜಾಗದ ಕೊರತೆಯಿಂದ ಬೇರೆ ಆಯ್ಕೆ ಇರಲಿಲ್ಲ. ರೈಲ್ವೆ ಮೇಲ್ಸೇತುವೆಯ ಉದ್ದೇಶ ಎರಡು ಬಡಾವಣೆಗಳನ್ನು ಸಂಪರ್ಕಿಸುವುದುʼ ಎಂದು ತಿಳಿಸಿದ್ದಾರೆ.

ಈ ಬಗ್ಗೆ PWD ಸಚಿವ ರಾಕೇಶ್ ಸಿಂಗ್ ಪ್ರತಿಕ್ರಿಯಿಸಿ, ‘ಸೇತುವೆ ನಿರ್ಮಾಣದ ನಂತರ, ತಜ್ಞರು ಇದ್ದಕ್ಕಿದ್ದಂತೆ ಕಾಣಿಸಿಕೊಂಡು ಈ ರೀತಿಯ ಮಾತುಗಳನ್ನು ಹೇಳುತ್ತಾರೆ. ಯಾವುದೇ ಸೇತುವೆಯನ್ನು ನಿರ್ಮಿಸುವಾಗ ಅನೇಕ ತಾಂತ್ರಿಕ ಅಂಶಗಳನ್ನು ಪರಿಗಣಿಸಲಾಗುತ್ತದೆ. ಇದು ಆರೋಪ ನಿಜವಾಗಿದ್ದರೆ, ತನಿಖೆ ನಡೆಸಲಾಗುವುದುʼ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT