ಚೆನ್ನೈ: ಜನಸಂಖ್ಯಾ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನವವಿವಾಹಿತ ದಂಪತಿಗಳು ವಿಳಂಬ ಮಾಡದೇ ತಕ್ಷಣವೇ ಮಕ್ಕಳನ್ನು ಮಾಡಿಕೊಳ್ಳಬೇಕು. ಇದರಿಂದ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ನಡೆಯುವಾಗ ರಾಜ್ಯಕ್ಕೆ ಅನುಕೂಲವಾಗುತ್ತದೆ ಎಂದು ಸೋಮವಾರ ಹೇಳಿದ್ದಾರೆ.
ಇಂದು ನಾಗಪಟ್ಟಣಂನಲ್ಲಿ ಡಿಎಂಕೆ ಜಿಲ್ಲಾ ಕಾರ್ಯದರ್ಶಿಯೊಬ್ಬರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸ್ಟಾಲಿನ್, ಮೊದಲೆಲ್ಲ ನಾನು ಕೂಡ ಮದುವೆಯಾದ ಕೂಡಲೆ ಮಕ್ಕಳನ್ನು ಮಾಡಿಕೊಳ್ಳಬೇಡಿ, ಇಬ್ಬರಿಗೂ ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯಾವಕಾಶ ಕೊಡಿ ಎಂದು ಹೇಳುತ್ತಿದ್ದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ನಮ್ಮಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದರೆ ಮಾತ್ರ ನಮಗೆ ಹೆಚ್ಚಿನ ಸಂಸದರು ಸಿಗುವ ಪರಿಸ್ಥಿತಿ ಇದೆ. ಪರಿಣಾಮಕಾರಿ ಜನಸಂಖ್ಯಾ ನಿಯಂತ್ರಣದಲ್ಲಿ ನಾವು ಯಶಸ್ವಿಯಾಗಿದ್ದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಹೀಗಾಗಿ, ಆದಷ್ಟು ಬೇಗ ಮಕ್ಕಳನ್ನು ಪಡೆಯಿರಿ. ಅವರಿಗೆ ಸುಂದರವಾದ ತಮಿಳು ಹೆಸರುಗಳನ್ನು ನೀಡಿ” ಎಂದು ಮನವಿ ಮಾಡಿದ್ದಾರೆ.
ತಮಿಳುನಾಡು ರಾಜ್ಯದ ಯಶಸ್ವಿ ಕುಟುಂಬ ಯೋಜನಾ ಕ್ರಮಗಳು ಈಗ ನಮ್ಮನ್ನು ಅನಾನುಕೂಲಕ್ಕೆ ದೂಡಿವೆ. ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್ ವಿಂಗಡಣೆ ಸಂಸತ್ತಿನಲ್ಲಿ ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟಾಲಿನ್ ಎಚ್ಚರಿಸಿದರು.
ಸ್ಟಾಲಿನ್ ಅವರು ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯ ಪರಿಣಾಮದ ಕುರಿತು ಚರ್ಚಿಸಲು ಮಾರ್ಚ್ 5 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಗೆ 40 ನೋಂದಾಯಿತ ರಾಜಕೀಯ ಪಕ್ಷಗಳನ್ನು ಆಹ್ವಾನಿಸಿದ್ದಾರೆ.