ನವದೆಹಲಿ: ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ರೂ.1,300 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ವಿರುದ್ಧ ಎಫ್ಐಆರ್ ದಾಖಲಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
2022 ರಲ್ಲಿ ದೆಹಲಿ ಸರ್ಕಾರದ ಜಾಗೃತ ನಿರ್ದೇಶನಾಲಯ, ಹಗರಣದ ತನಿಖೆಗೆ ಶಿಫಾರಸು ಮಾಡಿ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತು.
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಿಸೋಡಿಯಾ ಮತ್ತು ಜೈನ್ ಸಚಿವರಾಗಿದ್ದ ಅವಧಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಜಾಗೃತ ಆಯೋಗವು ಫೆಬ್ರವರಿ 17, 2020 ರಂದು ನೀಡಿದ್ದ ವರದಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ದೆಹಲಿ ಸರ್ಕಾರಿ ಶಾಲೆಗಳಲ್ಲಿ 2,400 ಕ್ಕೂ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಅಕ್ರಮ ನಡೆದಿರುವುದನ್ನು ಉಲ್ಲೇಖಿಸಿತ್ತು.