ಸರ್ವಪಕ್ಷ ಸಭೆ  
ದೇಶ

'ಆಪರೇಷನ್ ಸಿಂಧೂರ' ಬಳಿಕ ಸರ್ವಪಕ್ಷ ಸಭೆ: ಆಡಳಿತ-ವಿಪಕ್ಷ ನಾಯಕರು ಭಾಗಿ

'ಆಪರೇಷನ್ ಸಿಂಧೂರ್' ಯಶಸ್ಸು ಮತ್ತು ಅದರ ಪರಿಣಾಮಗಳ ಕುರಿತು ಸರ್ಕಾರ ಇಂದಿನ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಲಿದೆ.

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ, ಹದಿನೈದು ದಿನಗಳಲ್ಲಿ ಎರಡನೇ ಬಾರಿಗೆ ಸರ್ಕಾರದ ಉನ್ನತ ಮಟ್ಟದ ನಾಯಕರು ಮತ್ತು ವಿರೋಧ ಪಕ್ಷದ ನಾಯಕರು ಭೇಟಿಯಾಗಿ ಚರ್ಚಿಸುತ್ತಿದ್ದಾರೆ.

'ಆಪರೇಷನ್ ಸಿಂಧೂರ್' ಯಶಸ್ಸು ಮತ್ತು ಅದರ ಪರಿಣಾಮಗಳ ಕುರಿತು ಸರ್ಕಾರ ಇಂದಿನ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಲಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್ ಜೈಶಂಕರ್, ಜೆಪಿ ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಸರ್ಕಾರವನ್ನು ಪ್ರತಿನಿಧಿಸಿದರೆ, ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ ಆರ್ ಬಾಲು ಸಭೆಯಲ್ಲಿ ಪ್ರಮುಖ ವಿರೋಧ ಪಕ್ಷದ ನಾಯಕರು ಸೇರಿದ್ದಾರೆ.

ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಲೆ, ಬಿಜೆಡಿಯ ಸಸ್ಮಿತ್ ಪಾತ್ರ ಮತ್ತು ಸಿಪಿಐ (ಎಂ) ನ ಜಾನ್ ಬ್ರಿಟ್ಟಾಸ್ ಇತರ ವಿರೋಧ ಪಕ್ಷದ ನಾಯಕರಲ್ಲಿ ಸೇರಿದ್ದಾರೆ.

ಜೆಡಿ(ಯು) ನಾಯಕ ಸಂಜಯ್ ಝಾ, ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.

'ಆಪರೇಷನ್ ಸಿಂಧೂರ್' ಬಗ್ಗೆ ಎಲ್ಲಾ ಪಕ್ಷಗಳಿಗೆ ಸರ್ಕಾರ ಮಾಹಿತಿ ನೀಡಲು ಬಯಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ನಿನ್ನೆ ನಸುಕಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದವು, ಇದರಲ್ಲಿ ಜೈಶ್-ಎ-ಮೊಹಮ್ಮದ್ ಭದ್ರಕೋಟೆಯಾದ ಬಹಾವಲ್ಪುರ್ ಮತ್ತು ಲಷ್ಕರ್-ಎ-ತೈಬಾದ ನೆಲೆ ಮುರಿಡ್ಕೆ ಸೇರಿವೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರ ಹತ್ಯಾಕಾಂಡದ ಎರಡು ವಾರಗಳ ನಂತರ 'ಆಪರೇಷನ್ ಸಿಂಧೂರ್' ಅಡಿಯಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲಾಯಿತು. ದಾಳಿಯ ಕುರಿತು ನಾಯಕರಿಗೆ ಮಾಹಿತಿ ನೀಡಲು ಸರ್ಕಾರ ಈ ಹಿಂದೆ ಏಪ್ರಿಲ್ 24 ರಂದು ಸರ್ವಪಕ್ಷ ಸಭೆಯನ್ನು ಕರೆದಿತ್ತು.

ಸಭೆ ಆರಂಭಕ್ಕೆ ಮೊದಲು ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿ ನರೇಂದ್ರ ಮೋದಿ ಅವರು ದೇಶವು ಇಂತಹ ಪರಿಸ್ಥಿತಿಯಲ್ಲಿ ವಿಭಜನೆಯಾಗಬಾರದು ಎಂದು ಬಯಸುತ್ತಾರೆ ಎಂದು ಹೇಳಿದರು.

ಆಪರೇಷನ್ ಸಿಂಧೂರ್ ನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ನಿರ್ವಹಿಸಿವೆ. ಸರ್ಕಾರವು ಅದರ ಬಗ್ಗೆ ಬಹಳ ಸ್ಪಷ್ಟವಾಗಿದೆ. ಪ್ರಧಾನಿ ಮೋದಿಯವರ ಉದ್ದೇಶಗಳು ಈಗಾಗಲೇ ಜಗತ್ತಿಗೆ ತಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ವಿಭಜನೆಯಾಗಬಾರದು ಎಂದು ಪ್ರಧಾನಿ ಬಯಸುತ್ತಾರೆ. ಪ್ರತಿಯೊಬ್ಬ ಭಾರತೀಯರೂ ಒಂದಾಗಬೇಕಾದ ಪರಿಸ್ಥಿತಿ ಇದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel